ರಮೇಶ ಅರೋಲಿಯವರ ಒಂದು ಕವಿತೆ

2 Comments

ರಮೇಶ ಅರೋಲಿಯವರ ಈ ಕವಿತೆಯನ್ನು ಗೆಳೆಯ ಚಂದ್ರಶೇಖರ ಐಜೂರ್ ಕಳುಹಿಸಿದರು. ಇದು ಅವರ ಬ್ಲಾಗಿನಲ್ಲಿಯೂ ಕೂಡ ಪ್ರಕಟವಾಗಿದೆ.

ನಿಮ್ಮೊಂದಿಗೆ ಹಂಚಿಕೊಳ್ಳದೆ ಇರಲು ಸಾಧ್ಯವೇ ಇಲ್ಲ ಅನ್ನಿಸಿದಷ್ಟು ಇದು ನನ್ನನ್ನು ತಟ್ಟಿದ್ದರಿಂದ ಇಲ್ಲಿಯೂ ಅದನ್ನು ಹಂಚಿಕೊಳ್ಳುತ್ತಿದ್ದೇನೆ.

ದುಃಖ ದಾಖಲಿಸುವವನೆ ಇದನ್ನು ಬರೆದಿಟ್ಟುಕೊ !

ಕಟಕಟೆಯ ಕಿತಾಬಿನ ಹಾಳೆ ನಿನ್ನವು
ಹಿಡಿದ ಲೇಖನಿಯ ಶಾಯಿಗೂ ನಿನ್ನ ರಕ್ತದ ಗುಣ
ಇನ್ನು ತೀರ್ಪು ನಿನ್ನಿಚ್ಚೆಯಂತೆ ಬರೆದುಕೊಂಡಲ್ಲಿ
ಪ್ರತಿ ಸಲ ನಾನೇಕೆ ಆಶ್ಚರ್ಯಪಡಲಿ
ತಮಾಷೆಯೆಂದರೆ ಇಷ್ಟು ಹೇಳಲೂ ನಿನಗೆ
ಭದ್ರತೆ ಬೇಕು; ನನಗೋ ತುಕ್ಕು ತಕ್ಕಡಿಯ ಕೆಳಗೆ
ಪುಕ್ಕಲು ಆಯಸ್ಕಾಂತದ ನೆನಪು!
ಅದಕ್ಕೆ ಸದಾ ಹಾಲುಗಲ್ಲದ ಮೇಲೆ ನಳಿಕೆಯಿಡುವ
ನಿನ್ನ ಆದೇಶಗಳು ಎಂದೋ ಖಚಿತಪಡಿಸಿವೆ
ನನ್ನ ನಗುವಿನೆಡೆಗಿನ ನಿನ್ನ ಅವಿರತ ಗುರಿ
ದುಃಖವನು ಬರಿ ಇಮ್ಮಡಿಗೊಳಿಸುವುದೆಂದು!
ನೀನು ಕಿರುಚುವಷ್ಟು ಸಾರಿಯೂ ಮುಂದುವರೆಸುತ್ತೇನೆ
ಕಪ್ಪು ಹಲಗೆಯ ಮೇಲೆ ಆಕಾಶ ಬರೆದಿದ್ದು ನಾನೇ ; ಮತ್ತು
ನನಗೆ ಗೊತ್ತಿರುವುದು ಬರಿ ನಿಜವೆಂಬುದನು!
ಮೈದಾನಗಳು ಧಿಕ್ಕರಿಸಿದವನ ಪಾಪದ ಹೆಸರು
ಕಡಲ ಅಲೆಗಳ ಮಾತು ಬಿಡು ಮೊದಲಿನಂತೆ
ಮರೆವಿನ ಖಯಾಲಿ ಅವಕ್ಕೆ; ಆದರೆ ಈ ಸಲ
ಜಗದ ಎಂಥ ಕಲ್ಲಿನ ಮೇಲಾದರೂ ಕೆತ್ತಿಸು
ಸಿಕ್ಕ ತುಫಾಕಿಯ ಮೇಲಿನ ಬೆರಳ ನಿಶಾನೆ
ಕೇವಲ ಮೂರುವರ್ಷದ ನನ್ನದೇ ಎಂದು!
____________________________________________________
ಇತ್ತೀಚಿಗೆ ಜಿಂಬಾಬ್ವೆ ರಕ್ಷಣಾ ಪಡೆಯಿಂದ ಅಕ್ರಮವಾಗಿ ಬಂಧಿಸಲ್ಪಟ್ಟ “ಮೆಂಬರ್ಸ್ ಫಾರ್ ಡೆಮೊಕ್ರಟಿಕ್ ಚೇಂಜ್” ಮಾನವ ಹಕ್ಕುಗಳ ಸಂಘಟನೆಯ ದಂಪತಿಗಳ ಮೂರು ವರ್ಷದ ಮಗು ನಿಜೆಲ್ ಮೂಟೆ ಮಗೌ ನನ್ನು ಅಲ್ಲಿಯ ನ್ಯಾಯಾಲಯ ಅಪರಾಧಿಯೆಂದು ಗಣಿಸಿ ಮೂರು ತಿಂಗಳು ಜೈಲು ವಾಸ ನೀಡಿತ್ತು. ಮತ್ತು ಇದೀಗ “ಪ್ರಪಂಚದ ಅತಿ ಕಿರಿಯ ಉಗ್ರಗಾಮಿ “ಎಂಬ ಹಣೆ ಪಟ್ಟಿ ಹಚ್ಚಿತ್ತು. ಆದರೆ ಶಿಕ್ಷಾವಧಿ ಮುಗಿಸಿ ಮನೆ ಸೇರಿದ್ದರೂ ಮಾನಸಿಕವಾಗಿ ಜರ್ಜರಿತವಾದ ಮಗು ಸಹಜ ಸ್ಥಿತಿಗೆ ಬಂದಿಲ್ಲ. ನಗುವುದಿಲ್ಲ, ಅಪರಿಚಿತರು ಬಂದರೆ ಧಾವಿಸಿ ಅಮ್ಮನ ಹಿಂದೆ ಅಡಗಿಕೊಳ್ಳುವುದಾಗಿ ವರದಿಯಾಗಿದೆ.

ಚಿತ್ರಕೃಪೆ: www.fineartamerica.com

ನಾನು ಹುಡುಕುತ್ತಿದ್ದ ಹಾಡು!!

13 Comments

ನನ್ನ ಖುಶಿಗಳನ್ನ, ಬೇಜಾರುಗಳನ್ನ ಬಹಾಳ ದಿನಗಳಿಂದ ನನ್ನ ಹತ್ತಿರವೆ ಇಟ್ಟುಕೊಂಡು ಸಾಕಾಗಿದೆ. ನಿಮ್ಮ ಹತ್ತಿರವೂ ಹಂಚಿಕೊಳ್ಳುವಾ ಅಂತ. ಆದರೂ ಯಾಕೊ ಬ್ಲಾಗರುಗಳೂ ಸಪ್ಪೆಯಾಗಿಬಿಟ್ಟಹಾಗಿದಾರೆ. ಮುಂಚೆ ಒಂದು ಗಂಟೇಲಿ ಕಡಿಮೆ ಅಂದರು ಮೂರುನಾಕು ಹೊಸ ಪೋಸ್ಟುಗಳು ವರ್ಡ್‌ಪ್ರೆಸ್ ಡ್ಯಾಶ್‌ಬೋರ್ಡಿನಲ್ಲೆ ಕಂಡಿರೋವು. ಅದಲ್ಲದೆ ಬ್ಲಾಗ್‌ಸ್ಪಾಟಿನವು ಬೇರೆ. ಬ್ಲಾಗ್ ಲೋಕದ ಈ ನೂತನ ತಲ್ಲಣದ ಬಗ್ಗೆ ರಿಸರ್ಚ್ ಮಾಡುವಾ ಅಂತ ಯೋಚಿಸಿದರೆ ಅದರಲ್ಲಿ ಹೊಳೆದಿದ್ದು ಎರಡು ಅಥವಾ ಮೂರು ಪದಗಳು – ತಲ್ಲಣ, ತಳಮಳ ಮತ್ತು ತಲೆಮಾರು. ಇತ್ತೀಚೆಗೆ ಎಲ್ಲರೂನು ಇವುಗಳ ಸುತ್ತಲೆ ಗಿರ್ಕಿ ಹಾಕುವ ಹಾಗಿದೆ.

ತಲ್ಲಣವನ್ನು ಬಿಟ್ಟುಹಾಕಿ, ಏನಾದರು ಚಟ್‌ಪಟಾ ತಿನ್ನುವ ಅಂತ ಸಂಜೆ ಅಪರೂಪಕ್ಕೆ ಹೊರಬಿದ್ದ  ನನಗೆ ತುಮಕೂರಿನ ರಸ್ತೆಯಲ್ಲಿ ಹೊಸ ರೆಸ್ಟೊರೆಂಟೊಂದು ಕಣ್ಣಿಗೆ ಬಿತ್ತು. ಹೆಸ್ರು ’ಸಿಲ್ವರ್ ಆಪಲ್’ ಅಂತ. ಅಲ್ಲಿ ವಾಕರಿಕೆ ಬರೋವಷ್ಟು ಹಾಟ್ ಚಾಕೊಲೆಟ್ ಕೇಕ್ ತಿಂದು ಊಟ ಮಾಡಲಿಕ್ಕೇ ಆಗಲಿಲ್ಲ!! ಹಾಗೇ ಪೆಂಡಿಂಗ್ ಇದ್ದ ವ್ಯಾಸರಾಯ ಬಲ್ಲಾಳರ ಪುಸ್ತಕವೊಂದನ್ನು ಕೈಗೆತ್ತಿಕೊಂಡರೆ ನಮ್ಮ ’ಮ್ಯಾಕ್ಸಿಮಮ್ ಸಿಟಿ’ಯ ಕತೆಗಳು ಆವರಿಸಿಕೊಂಡು ಪ್ರೇತಗಳ ಹಾಗೇ ಕಾಡಲು ಶುರುವಿಟ್ಟವು. ಯಾವುದೊ ಸಿನೆಮಾದ ಬಗ್ಗೆ ಅರ್ಧ ಬರೆದು ತಲೆ ತುರಿಸಿಕೊಂಡರು ಮುಂದೆ ಹೋಗಲಾಗಲಿಲ್ಲ. ಪ್ರೋಕ್ರಾಸ್ಟಿನೇಶನ್ ಅನ್ನುವದು ಎಂಥ ಕಚಡ ರೋಗವು, ಅದರ ಆಳಗಳೇನು ಅನ್ನುವದು ಕಳೆದ ಕೆಲ ತಿಂಗಳುಗಳಲ್ಲಿ ಚೆನ್ನಾಗಿಯೇ ತಿಳಿಯಿತು. ನಾಟ್ ಎನಿಮೋರ್!! ಅಂತ ನನಗೆ ನಾನೇ ಒದ್ದುಕೊಂಡು ಮೈಕೊಡವಿ ಎದ್ದಿದೇನೆ.

ಮಾನ್ಸೂನು ಮೋಡಗಳು ಏನು ಓಡುತ್ತವಲ್ಲ, ಯಾರಿಗೊ ಅಪಾಯಿಂಟ್‌ಮೆಂಟ್ ಕೊಟ್ಟಿರುವ  ಹಾಗೆ! ಮಳೆಗಾಲದಲ್ಲಿ ಎಲ್ಲರಿಗೆ ಆಲಸ್ಯ ಬಂದರೆ, ನನಗೆ ಕೆಟ್ಟ ಉತ್ಸಾಹ!! “ನಿಂದು ವಾಟರ್ ಸೈನ್, ಅದಕ್ಕೆ ನಿಂಗೆ ನೀರಿನ ಹತ್ತಿರ ಇದ್ದರೇ ಖುಶಿ” ಅಂತ ಯಾರೊ  ಹೇಳಿದ್ದ ನೆನಪು. ಅದಕ್ಕೆ ಸರಿಯಾಗಿ ಈಗ ಶಾಲೆ ಬಿಡುವ ಸಮಯದಲ್ಲೆ ಮಳೆ ಬೇರೆ. ಅರ್ಥಾತ್  ಸೃಷ್ಟಿಯ ’ಡಿಂಗಾಲಲ ಹೊಯ್ ಹೊಯ್’ಟೈಮ್. ದಿನಾ ನೆಂದುಕೊಂಡು ಅವಳು ಖುಶಿಯಾಗಿ ಬರುವುದು. ನಾನು ಥೇಟ್ ನಮ್ಮಮ್ಮ ಮಾಡುತ್ತಿದ್ದ ಥರವೆ ಟವಲು, ಸ್ವೆಟರು ಹಿಡಿದುಕೊಂಡು ಅವಳ ಮೇಲೆ ಪೌನ್ಸ್ ಮಾಡಲು ಕಾದಿರುವುದು. ಬಲೇ ಕೆಟ್ಟ ಪಿಳ್ಳೆ ಅದು. ಪೇಂಟಿಂಗ್ ಮಾಡೋಕೆ ನೀರು ಬೇಕು ಅಂತ ಲೋಟದಲ್ಲಿ ಮಳೆ ನೀರು ಹಿಡಿಯುತ್ತ ಕೂತಿರುತ್ತೆ. ಹೋಂವರ್ಕ್ ಮಾಡ್‌ಬೇಕೂ ಅಂದ್ರೆ ಥರಾವರಿ ನಾಟಕ ಆಡತ್ತೆ. ಅಮ್ಮನ್ ಹತ್ತಿರ ಹೇಳಿದರೆ ’ಹಿಸ್ಟರಿ ರಿಪೀಟ್ಸ್’ ಅಂತ ಉದ್ಗರಿಸಿ  ’ಹಾಗೇ ಆಗಬೇಕು ಮಗಳೆ’ ಅನ್ನುವಹಾಗೆ ನಗ್ತಾರೆ. ಎಲ್ಲರು ಒಬ್ಬರಾದ ಮೇಲೊಬ್ಬರಹಾಗೆ ಸರತಿಯಲ್ಲಿದೀವಿ ಅಲ್ಲವೆ? ನನ್ನಮ್ಮ, ನಾನು, ನನ್ನ ಮಗಳು..

ಸರತಿ ಅಂದಾಗ ನೆನಪಾಯ್ತು. ನೆನ್ನೆ ನನ್ನ ಫೇವರೆಟ್ ಸೀರಿಯಲ್‌ನ ಡೌನ್‍ಲೋಡ್ ಮಾಡಿಕೊಂಡು ನೋಡುತ್ತಿದ್ದೆ. ಅದರಲ್ಲಿ ಒಂದು ಹಾಡು ತೇಲಿಬಂತು. ಅದನ್ನ ಕೇಳಿದ ಕೂಡಲೆ ಅನ್ನಿಸಿತು, ನಾನು ಇಲ್ಲಿಯತನಕ ಹುಡುಕುತ್ತಿದ್ದ ಹಾಡು ಇದೇನೆ ಅಂತ. ಸ್ವಲ್ಪ ಎಕ್ಸಾಜರೇಶನ್ ಆಯಿತು ಅಂತೀರ? ಅದು ನನ್ನ ಇನ್ನೊಂದು ಹೆಸರಲ್ಲವೆ? ಇರಲಿ. ಹಾಡಿನ ಯುಟ್ಯೂಬ್ ಲಿಂಕನ್ನ ಕೆಳಗ್ ಕೊಟ್ಟಿದೇನೆ.

ಹೇಗಿದೀರ ಎಲ್ರೂ?

ಶ್ರೀಮತಿ ಶರ್ಮಾಳ ಹುಲಿ

2 Comments

ಎಚ್.ಎಚ್. ಮನ್ರೋ(ಸಾಕಿ)(1870-1916)
ಮೂಲಕಥೆ: ಮಿಸೆಸ್ ಪ್ಯಾಕೆಲ್‌ಟೈಡ್ಸ್ ಟೈಗರ್
ಲೇಖಕರ ಬಗ್ಗೆ ಮಾಹಿತಿ:
‘ಸಾಕಿ’ (ಡಿಸೆಂಬರ್ 18, 1870 – ನವೆಂಬರ್ 13, 1916) ಎಂಬ ಬರಹನಾಮದಿಂದ ಪರಿಚಿತರಾಗಿರುವ ಬ್ರಿಟಿಶ್ ಬರಹಗಾರ ಹೆಕ್ಟರ್ ಹ್ಯೂ ಮನ್ರೋರ ಕಥೆಗಳು ಎಡ್ವರ್ಡಿಯನ್ ಸಮಾಜದ ವಿಡಂಬನೆ ಮಾಡುತ್ತಿದ್ದವು. ಸಣ್ಣಕಥೆಗಳ ಸರದಾರನೆಂದು ಪರಿಗಣಿಸಲಾಗುವ ಇವರನ್ನು ಓ. ಹೆನ್ರಿ ಮತ್ತು ಡೊರೋಥಿ ಪಾರ್ಕರ್‌ಗೆ ಹೋಲಿಸಲಾಗುತ್ತದೆ. ಆತ ತನ್ನ ಕಥೆಗಳ ಪಾತ್ರಗಳನ್ನು ಸೂಕ್ಷ್ಮವಾಗಿ ಚಿತ್ರಿಸುತ್ತ ಹೋಗುತ್ತಾರೆ. ‘ದ ಓಪನ್ ವಿಂಡೋ’ ಅವರ ಅತ್ಯಂತ ಪ್ರಸಿದ್ಧ ಸಣ್ಣಕಥೆ. ಆಸ್ಕರ್ ವೈಲ್ಡ್, ಲೂಯಿಸ್ ಕ್ಯಾರೊಲ್ ಮತ್ತು ರುಡ್ಯಾರ್ಡ್ ಕಿಪ್ಲಿಂಗರಿಂದ ಪ್ರಭಾವಿತರಾಗಿದ್ದ ಸಾಕಿ, ಪಿ.ಜಿ.ವೋಡ್‌ಹೌಸ್‌ರ ಮೇಲೆ ಅಪಾರ ಪ್ರಭಾವ ಬೀರಿದರು. ಕಥೆಗಳಲ್ಲದೆ ಅವರು ನಾಟಕಗಳನ್ನೂ ಬರೆದರು.

ಟೈಗರ್ ಲಿಲಿ ಹೂವು

ಒಂದು ಹುಲಿಯನ್ನು ಬೇಟೆಯಾಡಬೇಕೆನ್ನುವುದು ಶ್ರೀಮತಿ ಶರ್ಮಾಳ ಮನೋಕಾಮನೆಯೂ ಗುರಿಯೂ ಆಗಿದ್ದಿತು. ಕೊಲ್ಲುವ ಇಚ್ಛೆ ಅವಳಲ್ಲಿ ಇದ್ದಕ್ಕಿದ್ದ ಹಾಗೆ ಹುಟ್ಟಲಿಲ್ಲ ಅಥವಾ ಆಕೆ ಕಾಡನ್ನು ತೊರೆಯುವಾಗ ತಾನು ಕಂಡಿದ್ದಕ್ಕಿಂತ ಹೆಚ್ಚು ಕ್ಷೇಮವಾಗಿ, ಸಂಪೂರ್ಣವಾಗಿ ಬಿಡುವೆನೆಂದಾಗಲೀ, ಒಂದು ಕಾಡುಪ್ರಾಣಿಯನ್ನು ಕೊಂದು ಅಲ್ಲಿನ ಪ್ರತಿ ಮಿಲಿಯ ಜನಸಂಖ್ಯೆಗೆ ಇರುವ ಕಾಡುಪ್ರಾಣಿಗಳ ಒಂದು ದಶಮಾಂಶದಷ್ಟು ಭಾಗವನ್ನು ಕಡಿಮೆಗೊಳಿಸುತ್ತಿರುವೆನೆಂದಾಗಲೀ ಯೋಚನೆ ಬರಲಿಲ್ಲ. ಹುಲಿಯ ಹೆಜ್ಜೆಗಳೆಡೆ ಆಕೆಗೆ ಇದ್ದಕ್ಕಿದ್ದಂತೆ ಉಂಟಾದ ಬಲವಾದ ಸೆಳೆತಕ್ಕೆ ಮೂಲ ಕಾರಣ ಬೇರೆಯೇ ಇತ್ತು- ಕೆಲ ಸಮಯದ ಹಿಂದೆ ಶ್ರೀಮತಿ ಸುರುಚಿ ವರ್ಮಾಳನ್ನ ಅಲ್ಜೀರಿಯನ್ ವಿಮಾನಚಾಲಕನೊಬ್ಬ ಏರೋಪ್ಲೇನಿನಲ್ಲಿ ಕೂರಿಸಿಕೊಂಡು ಹನ್ನೊಂದು ಮೈಲಿ ದೂರ ಕರೆದುಕೊಂಡು ಹೋಗಿದ್ದು ಮತ್ತು ಆಕೆ ಅದರ ಸುದ್ದಿ ಬಿಟ್ಟು ಮತ್ತೇನನ್ನೂ ಮಾತನಾಡದೇ ಇದ್ದದ್ದು; ಇದಕ್ಕೆ ತಕ್ಕ ಪ್ರತ್ಯಸ್ತ್ರವೆಂದರೆ ವೈಯುಕ್ತಿಕವಾಗಿ ಶ್ರಮಪಟ್ಟು ಗಳಿಸಿದ ಹುಲಿಯ ಚರ್ಮ ಮತ್ತು ಪ್ರೆಸ್ ಚಿತ್ರಗಳ ಮಹಾಪೂರ. ಶ್ರೀಮತಿ ಶರ್ಮಾ ಈಗಾಗಲೇ ಕರ್ಜನ್ ರೋಡಿನ ತನ್ನ ಮನೆಯಲ್ಲಿ ತಾನು ವಿಶೇಷವಾಗಿ ಶ್ರೀಮತಿ ಸುರುಚಿ ವರ್ಮಾಳಿಗಾಗಿಯೇ ನೀಡಲಿರುವ ಲಂಚ್ ಪಾರ್ಟಿ, ಅಲ್ಲಿ ಪ್ರದರ್ಶಿಸಲಾಗಿರುವ ಹುಲಿಚರ್ಮದ ಕಂಬಳಿ ಎಲ್ಲರ ಮಾತಿನ ವಿಷಯವಾಗಿರುವುದು, ಇತ್ಯಾದಿಗಳ ಬಗ್ಗೆ ಸಾಕಷ್ಟು ಕಲ್ಪನೆಗಳನ್ನು ಮಾಡಿಕೊಂಡಿದ್ದಳು. ಶ್ರೀಮತಿ ಸುರುಚಿ ವರ್ಮಾಳ ಮುಂದಿನ ಹುಟ್ಟುಹಬ್ಬದಂದು ತಾನು ಆಕೆಗೆ ನೀಡಲಿರುವ ಹುಲಿಯುಗುರಿನ ಬ್ರೋಚ್‌ನ ವಿನ್ಯಾಸವನ್ನೂ ಮನಸ್ಸಿನಲ್ಲಿಯೇ ರೂಪಿಸಿಕೊಂಡಿದ್ದಳು. ಮುಖ್ಯವಾಗಿ ಹಸಿವು ಮತ್ತು ಪ್ರೇಮಗಳಿಂದ ಈ ಪ್ರಪಂಚವು ಪ್ರಭಾವಿತವಾಗಿದೆ ಎಂದು ಭಾವಿಸಲಾಗುತ್ತದೆಯಾದರೂ ಇದಕ್ಕೆ ಶ್ರೀಮತಿ ಶರ್ಮಾ ಒಂದು ಅಪವಾದವಾಗಿದ್ದಳು; ಆಕೆಯ ಚಲನವಲನಗಳು ಮತ್ತು ಉದ್ದೇಶಗಳು ಶ್ರೀಮತಿ ಸುರುಚಿ ವರ್ಮಾಳ ಬಗ್ಗೆ ಆಕೆಗಿದ್ದ ದ್ವೇಷದಿಂದ ನಿರ್ದೇಶಿಸಲ್ಪಡುತ್ತ ಇದ್ದವು.
ಪರಿಸ್ಥಿತಿಗಳು ಅನುಕೂಲಕರವಾಗಿ ಪರಿಣಮಿಸಿದವು. ಶ್ರೀಮತಿ ಶರ್ಮಾ ಹೆಚ್ಚು ಶ್ರಮಪಡದೆ ಹುಲಿಯನ್ನು ಗುಂಡಿಕ್ಕಿ ಕೊಲ್ಲುವ ಅವಕಾಶಕ್ಕಾಗಿ ಸಾವಿರ ರೂಪಾಯಿಗಳ ಬೆಲೆಸೂಚನೆ ನೀಡಿದ್ದಳು, ಮತ್ತು ಪಕ್ಕದ ಹಳ್ಳಿಯೊಂದರಲ್ಲಿಯೇ ಗೌರವಯುತವಾದ ಪೂರ್ವಚರಿತ್ರೆಯನ್ನು ಹೊಂದಿದ, ಹೆಚ್ಚುತ್ತಿದ್ದ ವಯಸ್ಸಿನ ತೊಂದರೆಗಳಿಂದಾಗಿ ಕಾಡುಪ್ರಾಣಿಗಳನ್ನು ಬೇಟೆಯಾಡುವುದನ್ನು ಬಿಟ್ಟು ಸಣ್ಣಪುಟ್ಟ ಸಾಕುಪ್ರಾಣಿಗಳಿಗೆ ತನ್ನ ಹಸಿವನ್ನು ಸೀಮಿತಗೊಳಿಸಿಕೊಂಡಿದ್ದ ಪ್ರಾಣಿಯೊಂದರ ಬೇಟೆಯನ್ನು ಎಲ್ಲರೂ ಬೆಂಬಲಿಸುತ್ತಿದ್ದಾಗಿ ತಿಳಿದುಬಂದಿತು. ಸಾವಿರ ರೂಪಾಯಿಗಳನ್ನು ಸಂಪಾದಿಸುವ ಸಂಭಾವ್ಯತೆಯು ಹಳ್ಳಿಗರ ಕ್ರೀಡಾ ಮತ್ತು ವಾಣಿಜ್ಯ ಪ್ರವೃತ್ತಿಗಳನ್ನು ಉತ್ತೇಜಿಸಿದ್ದವು; ಅಕಸ್ಮಾತ್ ಹುಲಿಯು ಹೊಸ ಬೇಟೆಗಳನ್ನು ಹುಡುಕಿಕೊಂಡು ಹೊಸ ಸ್ಥಳಗಳೆಡೆ ಅಲೆಯಲಾರಂಭಿಸಿದರೆ ಕೂಡಲೇ ಹಿಂದಿರುಗಿ ಸುದ್ದಿ ನೀಡುವ ಸಲುವಾಗಿ ಸ್ಥಳೀಯ ಕಾಡಿನ ಹೊರವಲಯದಲ್ಲಿ ಮಕ್ಕಳನ್ನು ಹಗಲೂ ರಾತ್ರಿ ಕಾವಲಿರಿಸಲಾಯಿತು, ಮತ್ತು ತಾನಿರುವ ಜಾಗದ ಬಗ್ಗೆ ಹುಲಿಯನ್ನು ಸಂತೃಪ್ತನಾಗಿರಿಸುವ ಸಲುವಾಗಿ ಕಡಿಮೆಬೆಲೆಯ ಮೇಕೆಗಳನ್ನು ಬೇಕೆಂತಲೇ ಅಜಾಕರೂಕತೆಯಿಂದ ಅಲ್ಲಿ ಇಲ್ಲಿ ಬಿಡಲಾಯಿತು. ಉಳಿದಿದ್ದ ಒಂದೇ ಒಂದು ಆತಂಕವೆಂದರೆ ಮೇಮ್‌ಸಾಹೇಬರ ಬೇಟೆಗೆ ಮುನ್ನವೇ ಹುಲಿ ತನ್ನ ಮುದಿವಯಸ್ಸಿನ ದೆಸೆಯಿಂದ ಪ್ರಾಣತೊರೆದರೆ, ಎನ್ನುವುದು. ಹೊಲಗದ್ದೆಗಳ ಕೆಲಸದ ನಂತರ ತಮ್ಮ ಮಕ್ಕಳನ್ನೆತ್ತಿಕೊಂಡು ಕಾಡು ದಾಟುತ್ತಿದ್ದ ತಾಯಂದಿರು ಎಲ್ಲಿ ಈ ಗೌರವಾನ್ವಿತ ಮಂದೆಗಳ್ಳನ ವಿಶ್ರಾಂತಿಯ ನಿದ್ದೆಯನ್ನು ಭಂಗಮಾಡುವೆವೋ ಎಂಬ ಭಯದಿಂದ ತಮ್ಮ ಹಾಡುಗಳನ್ನು ನಿಲ್ಲಿಸಿಬಿಡುತ್ತಿದ್ದರು.
ಹುಣ್ಣಿಮೆಯ, ಮೋಡರಹಿತವಾದ ಆ ಮಹಾರಾತ್ರಿಯೂ ಕೆಲದಿನಗಳಲ್ಲಿಯೇ ಆಗಮಿಸಿತು. ಅನುಕೂಲವಾದ ಜಾಗದಲ್ಲದ್ದ ಮರವೊಂದರ ಮೇಲೆ ಅಟ್ಟಣಿಗೆಯೊಂದನ್ನ ನಿರ್ಮಿಸಲಾಗಿದ್ದು, ಅದರ ಮೇಲೆ ಶ್ರೀಮತಿ ಶರ್ಮಾ ಮತ್ತು ಆಕೆಯ ಸವೇತನ ಸಂಗಾತಿ(ಪೇಯ್ಡ್ ಕಂಪ್ಯಾನಿಯನ್)ಯಾಗಿದ್ದ ಮಿಸ್ ರೇಣು ಹೊಂಚುಹಾಕುತ್ತ ಮುದುಡಿ ಕುಳಿತುಕೊಂಡಿದ್ದರು. ಸರಿಯಾದ ಅಂತರದಲ್ಲಿಯೇ ಅರೆಕಿವುಡಾಗಿದ್ದ ಹುಲಿಗೂ ನೀರವ ರಾತ್ರಿಯೊಂದರಲ್ಲಿ ಕೇಳುವಷ್ಟು ಜೋರಾಗಿ, ನಿಲ್ಲದೆಯೇ ಅರಚಬಲ್ಲ ಸಾಮರ್ಥ್ಯದ ಮೇಕೆಯೊಂದನ್ನು ಕಟ್ಟಿಹಾಕಲಾಗಿತ್ತು. ಪಕ್ಕಾ ಗುರಿಯುಳ್ಳ ರೈಫಲ್ ಮತ್ತು ಸಣ್ಣ ಸೈಜಿನ ಇಸ್ಪೀಟುಕಾರ್ಡ್‌ಗಳೊಂದಿಗೆ ಆ ಆಟಗಾರ್ತಿಯು ತನ್ನ ಶಿಕಾರಿ ಬರುವುದನ್ನೆ ಕಾಯುತ್ತಿದ್ದಳು.
“ನಮಗೇನಾದರೂ ಅಪಾಯವಾದ್ರೆ? ” ಮಿಸ್ ರೇಣು ಉಸುರಿದಳು.
ನಿಜವಾಗಿ ಆಕೆಗೆ ಕಾಡುಪ್ರಾಣಿಯ ಬಗ್ಗೆ ಕೊಂಚವೂ ಭಯವಿರಲಿಲ್ಲ, ಆದರೆ ತನಗೆ ನೀಡಲಾದ ಹಣಕ್ಕೆ ತಕ್ಕುದಾದ್ದಕ್ಕಿಂತ ಒಂದು ಅಣುವಷ್ಟು ಹೆಚ್ಚಿನ ಸೇವೆಯನ್ನು ಮಾಡಬೇಕಾಗಿ ಬರಬಹುದೆನ್ನುವುದರ ಬಗ್ಗೆ ಮಾತ್ರ ಆಕೆಗೆ ಮರಣಭೀತಿಯಿದ್ದಿತು.
“ನಾನ್ಸೆನ್ಸ್,” ಶ್ರೀಮತಿ ಶರ್ಮಾ ಹೇಳಿದಳು; “ಇದು ಬಹಳಾ ಮುದಿಯಾಗಿರೋ ಹುಲಿ. ಬಯಸಿದರೂ ಅದು ಇಲ್ಲಿಯವರೆಗೆ ಹಾರೋಕೆ ಸಾಧ್ಯವೇ ಇಲ್ಲ.”
“ಅದು ಮುದಿಹುಲಿ ಅಂತಾದ್ರೆ ನೀವು ಅದನ್ನ ಇನ್ನೂ ಕಡಿಮೆ ಬೆಲೆಗೆ ತಕ್ಕೋಬಹುದು ಅನ್ನಿಸುತ್ತೆ ನನಗೆ. ಸಾವಿರ ರೂಪಾಯಿ ಬಹಳಾನೇ ಜಾಸ್ತಿಯಾಯ್ತು.”
ರಾಷ್ಟೀಯತೆ ಅಥವಾ ಪಂಗಡಗಳು ಯಾವುದೇ ಇರಲಿ, ಮಿಸ್ ರೇಣು ಸಾಮಾನ್ಯವಾಗಿ ಹಣದ ಬಗ್ಗೆ ರಕ್ಷಿಸುವ ಹಿರಿಯಕ್ಕನ ಥರದ ಮನೋಭಾವನೆಯನ್ನ ಹೊಂದಿದ್ದಳು. ಆಕೆಯ ಉತ್ಸಾಹಪೂರ್ಣ ಮಧ್ಯಸ್ಥಿಕೆಯಿಂದಾಗಿ ಎಷ್ಟೋಸಾರಿ ದೆಹಲಿಯ ಯಾವುದೋ ಹೋಟೆಲಿನಲ್ಲಿ ಟಿಪ್ಸ್ ನೀಡುವುದರಲ್ಲಿ ಪೋಲಾಗಬಹುದಾಗಿದ್ದ ಹಣ ಉಳಿತಾಯವಾಗಿತ್ತು, ಮತ್ತು ಕಡಿಮೆ ದಯೆಯುಳ್ಳವರು ಹಣ ನೀಡುವಂತಹ ಪರಿಸ್ಥಿತಿಗಳಲ್ಲೂ ಕೂಡ ಆಕೆಯ ಬಳಿಯಿದ್ದ ಹಣ ಆಕೆಗೇ ಅಂಟಿಕೊಂಡಿರುತ್ತ ಇತ್ತು. ಮಾರುಕಟ್ಟೆಯಲ್ಲಿ ಹುಲಿಯ ಅಲ್ಪಾವಶೇಷಗಳ ಬೆಲೆಯ ತಗ್ಗುವಿಕೆಯ ಬಗ್ಗೆ ಆಕೆ ಮಾಡುತ್ತಿದ್ದ ಯೋಚನೆಗಳು ಅದೇ ಪ್ರಾಣಿ ಅಲ್ಲಿ ಪ್ರತ್ಯಕ್ಷವಾಗಿದ್ದರಿಂದಾಗಿ ಮಾಯವಾದವು. ಕಟ್ಟಿಹಾಕಿದ್ದ ಮೇಕೆಯನ್ನು ಕಾಣುತ್ತಲೆ ಹುಲಿಯು ಲಭ್ಯವಿದ್ದ ಆಡಗುದಾಣಗಳ ಉಪಯೋಗವನ್ನು ಪಡೆದುಕೊಳ್ಳುವುದರ ಬದಲಾಗಿ, ದೊಡ್ಡ ಆಕ್ರಮಣ ಮಾಡುವ ಮೊದಲು ಸಣ್ಣ ವಿಶ್ರಾಂತಿಯೊಂದನ್ನು ಪಡೆದುಕೊಳ್ಳುವ ಸಲುವಾಗಿ ತನ್ನ ನಾಲ್ಕೂ ಕಾಲುಗಳನ್ನು ಅಗಲಕ್ಕೆ ಚಾಚಿ ಬಿದ್ದುಕೊಂಡಿತು.
“ಅದಕ್ಕೆ ಖಾಯಿಲೆಯಾಗಿದೆ ಅಂತ ನಂಗನ್ನಿಸುತ್ತೆ” ಮಿಸ್ ರೇಣು ಹಿಂದಿಯಲ್ಲಿ ಜೋರಾಗಿ ಪಕ್ಕದ ಮರದ ಮೇಲೆ ಹೊಂಚುಹಾಕಿ ಕುಳಿತಿದ್ದ ಗ್ರಾಮದ ಮುಖಂಡನಿಗೆ ಕೇಳಲೆಂದು ಹೇಳಿದಳು.
“ಹುಶ್!” ಶ್ರೀಮತಿ ಶರ್ಮಾ ಹೇಳಿದಳು. ಮತ್ತು ಅದೇ ಹೊತ್ತಿಗೆ ಹುಲಿಯು ತನ್ನ ಶಿಕಾರಿಯೆಡೆ ತೆವಳಲು ಆರಂಭಿಸಿತು.
“ಈಗ, ಈಗ!” ಮಿಸ್ ರೇಣು ಸ್ವಲ್ಪ ಸಡಗರದಿಂದ ಪ್ರೋತ್ಸಾಹಿಸಿದಳು; “ಅದು ಮೇಕೆಯನ್ನ ಮುಟ್ಟಲಿಲ್ಲಾ ಅಂದರೆ ಅದಕ್ಕಾಗಿ ನಾವು ಬೆಲೆ ತೆರಬೇಕಾಗಿಲ್ಲ.” (ಮೇಕೆಯ ಬೆಲೆ ಪ್ರತ್ಯೇಕವಾಗಿತ್ತು.)
ಜೋರಾದ ಶಬ್ದದೊಡನೆ ರೈಫಲ್ ಸಿಡಿಯಿತು, ಮತ್ತು ಆ ಬೃಹತ್ ಗಾತ್ರದ ಕಂದುಹಳದಿ ಬಣ್ಣದ ಪ್ರಾಣಿಯು ಒಂದುಕಡೆಗೆ ನೆಗೆದು ಪಕ್ಕಕ್ಕೆ ಹೊರಳಿ ಸಾವಿನ ನಿಶ್ಚಲತೆಯನ್ನು ಪಡೆದುಕೊಂಡಿತು. ಕ್ಷಣವೊಂದರಲ್ಲಿ ಸಂಭ್ರಮಗೊಂಡ ಸ್ಥಳೀಯರ ಗುಂಪೊಂದು ಜಮಾಯಿಸಿ, ಅವರ ಕೂಗುಗಳಿಂದ ಹಳ್ಳಿಗೆ ಸುದ್ದಿ ತಲುಪಿ, ಹಲವಾರು ಟಾಮ್-ಟಾಮ್ಗಳನ್ನು ಬಾರಿಸುವುದರ ಮೂಲಕ ವಿಜಯೋತ್ಸವವನ್ನು ಆಚರಿಸಲಾಯಿತು. ಅವರ ವಿಜಯ ಮತ್ತು ಸಂಭ್ರಮಗಳು ಶ್ರೀಮತಿ ಶರ್ಮಾಳ ಹೃದಯದಲ್ಲಿಯೂ ಪ್ರತಿಧ್ವನಿಸಿದವು; ಕರ್ಜನ್ ರೋಡಿನ ಲಂಚ್ ಪಾರ್ಟಿ ಈಗಾಗಲೇ ಬಹಳ ಹತ್ತಿರವಾದಂತೆ ಭಾಸವಾಗತೊಡಗಿತು.
ಮೇಕೆಯು ಕೆಟ್ಟದಾದ ಬುಲೆಟ್ ಗಾಯವೊಂದರಿಂದ ಸಾವಿಗೆ ಹತ್ತಿರವಾಗಿದೆಯೆಂದೂ, ಹುಲಿಯ ಮೇಲೆ ರೈಫಲಿನ ಕೆಲಸದ ಯಾವ ನಿಶಾನೆಯೂ ಇಲ್ಲವೆಂದೂ ಕಂಡುಹಿಡಿದು ಆಕೆಯ ಗಮನ ಸೆಳೆದವಳು ಮಿಸ್ ರೇಣು ಆಗಿದ್ದಳು. ತಪ್ಪಾದ ಪ್ರಾಣಿ ಗುಂಡೇಟಿಗೆ ಗುರಿಯಾಗಿತ್ತು, ಮತ್ತು ಶಿಕಾರಿಯ ಪ್ರಾಣಿಯು ಇದ್ದಕ್ಕಿದ್ದಂತೆ ಉಂಟಾದ ರೈಫಲಿನ ಶಬ್ದಕ್ಕೆ ಬೆಚ್ಚಿ ಹೃದಯಾಘಾತದಿಂದ ಅಸುನೀಗಿತ್ತು. ಶ್ರೀಮತಿ ಶರ್ಮಾಳಿಗೆ ಈ ವಿಷಯದಿಂದ ಅಸಮಾಧಾನವುಂಟಾಯಿತಾದರೂ ಅದು ಕ್ಷಮಾರ್ಹವಾದ ತಪ್ಪಾಗಿತ್ತು, ಏನೆಂದರೂ ಹುಲಿಯು ಅವಳದಾಗಿತ್ತು, ಮತ್ತು ಸಾವಿರ ರೂಪಾಯಿಗಳನ್ನು ಪಡೆಯಲು ಕಾತುರದಿದಿದ್ದ ಗ್ರಾಮಸ್ಥರು ಆಕೆಯೇ ಹುಲಿಗೆ ಗುಂಡಿಕ್ಕಿದಳೆಂಬ ಸುಳ್ಳನ್ನು ಸಂತಸದಿಂದ ಅನುಮೋದಿಸಿದರು. ಹೇಗಿದ್ದರೂ ಮಿಸ್ ರೇಣು ಆಕೆಯ ಸವೇತನ ಸಂಗಾತಿಯಾಗಿದ್ದವಳು. ಆದ್ದರಿಂದ ಶ್ರೀಮತಿ ಶರ್ಮಾ ಹಗುರವಾದ ಹೃದಯದಿಂದ ಕ್ಯಾಮೆರಾಗಳನ್ನು ಎದುರಿಸಿದಳು ಮತ್ತು ಆಕೆಯ ಚಿತ್ರವು ‘ನವದೆಹಲಿ ವೀಕ್’ನ ‘ವಾರದ ಚಿತ್ರ’ ವಿಭಾಗದಿಂದ ತನ್ನ ಕೀರ್ತಿಯನ್ನು ಎಲ್ಲೆಡೆಗೆ ಹರಡಿತು. ಶ್ರೀಮತಿ ಸುರುಚಿ ವರ್ಮಾಳ ಬಗ್ಗೆ ಹೇಳಬೇಕೆಂದರೆ, ಆಕೆ ಹಲವಾರು ವಾರಗಳವರೆಗೆ ‘ನವದೆಹಲಿ ವೀಕ್’ ಅನ್ನು ನೋಡಲೂ ನಿರಾಕರಿಸಿದಳು ಮತ್ತು ಹುಲಿಯ ಹಲ್ಲಿನ ಬ್ರೋಚ್‌ನ ಉಡುಗೊರೆಗೆ ಪ್ರತಿಯಾಗಿ ಆಕೆ ಕಳುಹಿಸಿದ ಧನ್ಯವಾದಪತ್ರವು ಅದುಮಿಟ್ಟ ಭಾವನೆಗಳಿಗೆ ಮಾದರಿಯಾಗಿದ್ದಿತು. ಲಂಚ್ ಪಾರ್ಟಿಯನ್ನು ಆಕೆ ನಿರಾಕರಿಸಿದಳು; ಕೆಲವು ಎಲ್ಲೆಗಳನ್ನು ದಾಟಿದರೆ ಅದುಮಿಟ್ಟ ಭಾವನೆಗಳೂ ಅಪಾಯಕಾರಿಯಾಗಿಬಿಡುವ ಸಾಧ್ಯತೆಗಳಿವೆ.
ಕರ್ಜನ್ ರೋಡಿನ ಮನೆಯಿಂದ ಹುಲಿಯ ಚರ್ಮದ ಕಂಬಳಿಯು ಆಕೆಯ ಹೊಸಾ ಬಂಗಲೆಗೆ ಪಯಣಿಸಿತು ಮತ್ತು ಅಲ್ಲಿನ ಜನರ ಮೆಚ್ಚುಗೆಗೆ ಪಾತ್ರವಾಯಿತು. ಅಲ್ಲಿನ ದೊಡ್ಡ ಪಾರ್ಟಿಯೊಂದಕ್ಕೆ ಶ್ರೀಮತಿ ಶರ್ಮಾ ಡಯಾನಾ ದೇವತೆಯ ಕಾಸ್ಟ್ಯೂಮ್ ಧರಿಸಿ ಹೋದಾಗ ಅದು ಆಕೆಗೆ ತಕ್ಕುದಾಗಿ ಕಂಡಿತು. ಆದರೆ ರಾಜೀವ್ ಮೆಹ್ತಾ ಆದಿಯುಗದ ಥೀಮಿನ ಡ್ಯಾನ್ಸ್ ಪಾರ್ಟಿಯೊಂದನ್ನು ಆಯೋಜಿಸಿ ಅದರಲ್ಲಿ ಎಲ್ಲರೂ ತಾವು ಬೇಟೆಯಾಡಿದ ಪ್ರಾಣಿಗಳ ಚರ್ಮಗಳನ್ನು ಧರಿಸಬೇಕೆಂದು ಸೂಚಿಸಿದ್ದು ಆಕರ್ಷಕವಾಗಿದ್ದರೂ, ಶ್ರೀಮತಿ ಶರ್ಮಾ ನಿರಾಕರಿಸಿದಳು. “ನನ್ನ ಪರಿಸ್ಥಿತಿ ಸಣ್ಣ ಮಗುವೊಂದರ ಹಾಗಿರಬಹುದು” ರಾಜ್ ಹೇಳಿಕೊಂಡ, “ಒಂದೆರಡು ಕೆಟ್ಟ ಮೊಲದ ಚರ್ಮಗಳಷ್ಟೇ ಇರೋದು ನನ್ನ ಕೈಲಿ, ಆದರೆ,”.. ಡಯಾನಾ ದೇವತೆಯ ದೇಹದ ಅಳತೆಯ ಮೇಲೆ ಆಸೆಯ ಕಣ್ಣೋಟ ಬೀರುತ್ತ ಆತ ಹೇಳಿದ, “ನಾನೂ ಆ ನೃತ್ಯ ಮಾಡುತ್ತಿರೋ ರಶ್ಯನ್ ಯುವಕನಷ್ಟೇ ಸದೃಢನಾಗಿದೀನಿ.”
“ನಿಜವಾಗಿ ಅಲ್ಲಿ ಏನು ನಡೀತೂ ಅಂತ ಗೊತ್ತಾದರೆ ಎಲ್ಲರಿಗೂ ಎಷ್ಟು ತಮಾಷೆ ಅನ್ನಿಸಬಹುದು,” ಮಿಸ್ ರೇಣು ಆ ಪಾರ್ಟಿ ನಡೆದ ಕೆಲದಿನಗಳ ಬಳಿಕ ಹೇಳಿದಳು.
“ನೀನು ಹೇಳ್ತಾ ಇರೋದರ ಅರ್ಥವೇನು?” ಶ್ರೀಮತಿ ಶರ್ಮಾ ಆತುರವಾಗಿ ಕೇಳಿದಳು.
“ಅದೇ, ನೀವು ಮೇಕೆಗೆ ಗುಂಡುಹೊಡೆದು ಹುಲಿ ಹೆದರಿಕೊಂಡು ಸತ್ತುಹೋಯಿತಲ್ಲ,” ಮಿಸ್ ರೇಣು ತನ್ನ ಅಪ್ರಿಯವಾಗಿದ್ದರೂ ಹಿತಕರವಾಗಿದ್ದ ನಗೆಯೊಂದಿಗೆ ಹೇಳಿದಳು.
“ಯಾರೂ ಅದನ್ನ ನಂಬಲಾರರು,” ಶ್ರೀಮತಿ ಶರ್ಮಾ ಹೇಳಿದಳು. ಆಕೆಯ ಮುಖ ವಿನ್ಯಾಸಗಳಿದ್ದ ಪುಸ್ತಕವೊಂದರ ಪುಟಗಳಂತೆ ವೇಗವಾಗಿ ಬಣ್ಣ ಬದಲಾಯಿಸತೊಡಗಿತು.
“ಸುರುಚಿ ವರ್ಮಾ ನಂಬಿಯೇ ನಂಬುತ್ತಾಳೆ,” ಮಿಸ್ ರೇಣು ಹೇಳಿದಳು. ಶ್ರೀಮತಿ ಶರ್ಮಾಳ ಮುಖ ಬಿಳಿಚಿದ ಹಸಿರುವರ್ಣವನ್ನು ತಲುಪಿ ಹಾಗೇ ಉಳಿಯಿತು.
“ನೀನು ನಿಜವಾಗಿ ನನ್ನ ವಿಷಯ ಹೇಳುವುದಿಲ್ಲ ತಾನೆ?” ಆಕೆ ಕೇಳಿದಳು.
“ಹರಿಯಾಣದ ಹಳ್ಳಿಯೊಂದರ ಹತ್ತಿರ ನಾನು ವೀಕೆಂಡ್ ಕಳೆಯಲು ಕಾಟೇಜೊಂದನ್ನ ನೋಡಿದೀನಿ. ಹದಿನಾರೂವರೆ ಲಕ್ಷ ಅಷ್ಟೆ. ಒಳ್ಳೇ ಬೆಲೆ. ತಕರಾರೇ ಇಲ್ಲ. ನನ್ನ ಹತ್ತಿರ ದುಡ್ಡಿಲ್ಲ, ಅಷ್ಟೆ.”
***
ಮಿಸ್ ರೇಣುವಿನ ಮುದ್ದಾದ ವೀಕೆಂಡ್ ಕಾಟೇಜಿಗೆ ‘ಮೃಗಶಿರಾ’ ಎಂದು ಹೆಸರಿಡಲಾಗಿದ್ದು, ಬೇಸಿಗೆಯ ವೇಳೆಯಲ್ಲಿ ಅಲ್ಲಿಯ ತೋಟದ ಅಂಚುಗಳಲ್ಲಿ ಅರಳುವ ಟೈಗರ್-ಲಿಲಿ ಹೂವುಗಳು ಆಕೆಯ ಸ್ನೇಹಿತರ ಅಚ್ಚರಿ ಮತ್ತು ಮೆಚ್ಚುಗೆಗಳಿಗೆ ಪಾತ್ರವಾಗಿವೆ.
ಇದನ್ನೆಲ್ಲ ರೇಣು ಹೇಗೆ ನಿಭಾಯಿಸ್ತಾಳೋ ಎಂದು ಎಲ್ಲರೂ ಹೇಳುತ್ತಾರೆ.
ಶ್ರೀಮತಿ ಶರ್ಮಾ ಈಗ ದೊಡ್ಡಬೇಟೆಗಳಿಗೆ ಹೋಗುವುದಿಲ್ಲ.
“ಸಾಂದರ್ಭಿಕ ಖರ್ಚುಗಳು ಬಹಳ ಭಾರಿಯಾಗಿವೆ” ಆಕೆ ವಿಚಾರಿಸುವ ಸ್ನೇಹಿತರಲ್ಲಿ ತೋಡಿಕೊಳ್ಳುತ್ತಾಳೆ.
ಚಿತ್ರ ಕೃಪೆ: www.leslierohonczy.com

ಪುಷ್ಪವಲ್ಲಿ (ಮೂಲ – ’The Bellflower’ by Guy de Maupassant)

1 Comment

ಕೆಲವು ಹಳೇ ನೆನಪುಗಳು ಎಷ್ಟೊಂದು ವಿಚಿತ್ರವಾಗಿರುತ್ತವೆ ಅಲ್ವೇ? ಆಚೆಗೆ ತಳ್ಳಿಬಿಡೋಣ ಅಂದರೂ ಬಿಡದೆ ಕಾಡುತ್ತಲೆ ಇರುತ್ತವೆ! ಈಗ ನಾನು ಹೇಳೋಕೆ ಹೊರಟಿರೋ ಸಂಗತಿನೂ ಹಾಗೇನೆ, ಅದು ಎಷ್ಟು ಹಳೇದು ಅಂದರೆ ಇನ್ನೂ ಅದು ಇಷ್ಟೊಂದು ಸ್ಪಷ್ಟವಾಗಿ ನನ್ನ ನೆನಪುಗಳಿಗೆ ತಗುಲಿಹಾಕಿಕೊಂಡಿರೋದು ಯಾಕೆ ಅಂತಲೇ ನನಗೆ ಅರ್ಥವಾಗ್ತಾ ಇಲ್ಲ. ಅದಾದಮೇಲಿಂದ ನಾನು ಅದೆಷ್ಟೋ ಭೀಕರ ಘಟನೆಗಳನ್ನ ಕಣ್ಣಾರೆ ನೋಡಿದೀನಿ, ಆದರೆ ಈ ಪುಷ್ಪವಲ್ಲಿಯ ಮುಖ ದಿನಕ್ಕೊಂದು ಸಾರಿಯಾದರೂ ನನ್ನ ಕಣ್ಣೆದುರು ಬಂದೇ ಬರುತ್ತದಲ್ಲ ಅಂತನ್ನೋದು ವಿಚಿತ್ರ ಅನ್ನಿಸ್ತದೆ. ಆಕೆಯ ಮುಖ ಇನ್ನೂ ನನ್ನ ನೆನಪಲ್ಲಿ ಹಾಗೇ ಇದೆ, ನಾನು ಬಹಳಾ ವರ್ಷಗಳ ಹಿಂದೆ ಹತ್ತೋ, ಹನ್ನೆರಡೋ ವಯಸ್ಸಿನಲ್ಲಿ ಆಕೆಯನ್ನು ಕಂಡಿದ್ದ ಹಾಗೇ.
ಅವಳು ಒಬ್ಬ ದರ್ಜಿಯಾಗಿದ್ದಳು ಮತ್ತು ಪ್ರತಿ ಗುರುವಾರ ನನ್ನ ಅಪ್ಪ ಅಮ್ಮನ ಮನೆಗೆ ಅದೂ ಇದೂ ಬಟ್ಟೆ ಹೊಲಿಯುವುದಕ್ಕೋಸ್ಕರ ಬರುವಳು. ನನ್ನ ತಂದೆತಾಯಂದಿರ ಮನೆ ಹಳ್ಳಿಕಡೆಯಲ್ಲಿ ‘ತೊಟ್ಟಿಮನೆ’ ಅಂತ ಕರೀತಾರಲ್ಲ, ಆ ಥರದ ಹೆಂಚಿನ ಮನೆ. ಅದಕ್ಕೆ ಹೊಂದಿಕೊಂಡ ಹಾಗೆ ಮೂರುನಾಲ್ಕು ತೋಟಗಳಿದ್ದವು.
ನಮ್ಮ ಹಳ್ಳಿ ಸುಮಾರು ದೊಡ್ಡದೇ, ಹೆಚ್ಚೂಕಡಿಮೆ ಸಣ್ಣ ಮಾರುಕಟ್ಟೆ ಟೌನೇ ಅನ್ನಬಹುದು. ನಮ್ಮ ಮನೆಯಿಂದ ಹಳ್ಳಿಗೆ ಸುಮಾರು ನೂರು ಯಾರ್ಡ್ ಅಂತರ. ಊರ ನಟ್ಟನಡುವೆ ಒಂದು ದೇವಸ್ಥಾನ, ಭಾಳ ಹಳೇದು, ಕಲ್ಲಿನದು. ಸಮಯ ಕಳೀತಾ ಕಲ್ಲಿನ ಬಣ್ಣವೇ ಗೊತ್ತಾಗದಹಾಗೆ ಕಪ್ಪಗಾಗಿಬಿಟ್ಟಿತ್ತು.
ಸರೀ, ಪ್ರತಿ ಗುರುವಾರ ಪುಷ್ಪವಲ್ಲಿ ಬೆಳಗ್ಗೆ ಆರೂವರೆ ಏಳುಗಂಟೆಗೇ ಹಾಜರಾಗಿಬಿಡೋಳು. ಬರ್ತಾ ಇದ್ದ ಹಾಗೇ ಹೊಲಿಗೆಮೆಶೀನಿದ್ದ ರೂಮಿಗೆ ನುಗ್ಗಿ ಕೂಡಲೆ ಕೆಲಸ ಶುರುಮಾಡಿಬಿಡೋಳು. ತೆಳ್ಳಗೆ ಎತ್ತರಕ್ಕೆ ಇದ್ದ ಅವಳಿಗೆ ಗಡ್ಡ ಇತ್ತು, ಅಥವಾ ಮುಖದ ಮೇಲೆ ಹೆಚ್ಚಿಗೆ ಕೂದಲಿತ್ತು ಅನ್ನಬಹುದು. ಅಚ್ಚರಿಪಡಿಸುವಷ್ಟು ಹೆಚ್ಚಿಗೆ ಗಡ್ಡ ಇದ್ದ ಅವಳ ಮುಖದ ಮೇಲಿನ ಕೂದಲು ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಗುಂಪುಗುಂಪಾಗಿ ಯಾರೋ ಹುಚ್ಚು ಮನುಷ್ಯ ಆ ಅಗಲ ಮುಖದ ಮೇಲೆ ಕೂದಲನ್ನ ಹೊಲಿದಿರುವ ಹಾಗೆ ಬೆಳೆದುಕೊಂಡು ಮಿಲಿಟರಿ ಅಧಿಕಾರಿಯೊಬ್ಬ ಹೆಣ್ಣುವೇಷ ಹಾಕಿದ ಹಾಗೆ ಕಾಣುತ್ತ ಇತ್ತು. ಆಕೆಯ ಮೂಗಿನ ಮೇಲೂ, ಮೂಗಿನಡಿಯಲ್ಲೂ, ಮೂಗಿನ ಸುತ್ತಲೂ, ಗದ್ದದ ಮೇಲೂ, ಕೆನ್ನೆಗಳ ಮೇಲೂ ಕೂದಲಿತ್ತು ಮತ್ತು ಸಾಮಾನ್ಯವಾಗಿ ಇರುವುದಕ್ಕಿಂತ ಬಹಳ ಜಾಸ್ತಿ ದಪ್ಪ ಮತ್ತು ಉದ್ದವಿದ್ದ ಆಕೆಯ ಹುಬ್ಬುಗಳ ಕೂದಲು ಸಾಕಷ್ಟು ಬೆಳ್ಳಿಬಣ್ಣಕ್ಕೆ ತಿರುಗಿದ್ದು ಯಾರೊ ಅಲ್ಲಿ ಮಿಷ್ಟೇಕು ಮಾಡಿಕೊಂಡು ಒಂದು ಜೊತೆ ಮೀಸೆಗಳನ್ನ ಅಂಟಿಸಿದಾರೇನೋ ಅನ್ನಿಸುವ ಹಾಗೆ ಕಾಣುತ್ತಿದ್ದವು.
ಅವಳು ಕುಂಟುತ್ತಿದ್ದಳಾದರೂ ಅದು ಕುಂಟರು ಸಾಮಾನ್ಯವಾಗಿ ಕುಂಟುವ ರೀತಿಯಿರದೆ ಕುರಿಗಳು ಏನನ್ನಾದರೂ ಹತ್ತುವಾಗ ಕುಂಟುವ ರೀತಿ ಇರುತ್ತಿತ್ತು. ಸರಿಯಾಗಿರುವ ಕಾಲಿನ ಮೇಲೆ ತನ್ನ ದೊಡ್ಡ, ಕಂಪಿಸುವ ದೇಹವನ್ನು ಊರುವಾಗಲೆಲ್ಲ ಆಕೆ ಒಂದು ಬೃಹತ್ ಅಲೆಯ ಮೇಲೆ ಸವಾರಿ ಮಾಡಲು ತಯಾರಾಗುತ್ತಿರುವಳೇನೋ ಅನ್ನಿಸುವುದು, ಮತ್ತೆ ಆಕೆ ಅಚಾನಕ್ಕಾಗಿ ಯಾವುದೋ ಗಹ್ವರವೊಂದರಲ್ಲಿ ಮುಳುಗಿ ಮಾಯವಾಗುವ ಹಾಗೆ ಧುಮ್ಮಿಕ್ಕಿ ನೆಲಕ್ಕಿಳಿಯುವಳು. ಆಕೆಯ ನಡಿಗೆ ಚಂಡಮಾರುತದಲ್ಲಿ ಸಿಕ್ಕಿಹಾಕಿಕೊಂಡ ಹಡಗಿನ ಹಾಗಿರುತ್ತಿತ್ತು. ಆಕೆ ಯಾವಾಗಲೂ ತಲೆಯಮೇಲೆ ಹೊದ್ದುಕೊಂಡಿರುವ ಸೆರಗು ಪ್ರತಿಸಾರೆ ಕುಂಟುವಾಗಲೂ ಹಾರಾಡಿಕೊಂಡು ದಿಗಂತದುದ್ದಕ್ಕೂ ಉತ್ತರದಿಂದ ದಕ್ಷಿಣಕ್ಕೆ, ದಕ್ಷಿಣದಿಂದ ಮತ್ತೆ ಉತ್ತರಕ್ಕೆ ಪ್ರಯಾಣಿಸುವ ಥರ ಭಾಸವಾಗುತ್ತ ಇತ್ತು.
ನನಗೆ ಪುಷ್ಪವಲ್ಲಿಯಮ್ಮ ಅಂದರೆ ತುಂಬ ಇಷ್ಟವಿತ್ತು. ಬೆಳಗ್ಗೆ ಎದ್ದತಕ್ಷಣ ಹೊಲಿಗೆಮಿಶೀನಿನ ಕೋಣೆಗೆ ಓಡಿಹೋಗಿ ಅಲ್ಲಿ ಆಕೆ ತನ್ನ ಕಾಲಡಿ ಬೆಚ್ಚಗಾಗಲೆಂದು ಚಾಪೆಯೊಂದನ್ನಿಟ್ಟುಕೊಂಡು ಕೆಲಸದಲ್ಲಿ ನಿಮಗ್ನಳಾಗಿರುವುದನ್ನೆ ನೋಡುತ್ತ ನಿಲ್ಲುವೆ. ನಾನು ಬಂದ ತಕ್ಷಣ ಆಕೆ ನನಗೆ ಆ ಚಳಿ ತುಂಬಿದ ದೊಡ್ಡ ಕೋಣೆಯಲ್ಲಿ ಶೀತವಾಗಬಾರದೆಂದು ತನ್ನ ಚಾಪೆಯನ್ನು ಕೊಡುವಳು.
“ಇದು ನಿನ್ನ ತಲೆಯಿಂದ ರಕ್ತ ಕೆಳಗೆ ಹರಿಯೋಹಾಗೆ ಮಾಡತ್ತೆ” ಅವಳು ನನಗೆ ಹೇಳುವಳು.
ತನ್ನ ಉದ್ದುದ್ದನೆಯ, ವಕ್ರವಾದ ಪರಿಣತ ಬೆರಳುಗಳಿಂದ ಬಟ್ಟೆಯನ್ನು ಹೊಲಿಯುತ್ತ, ತನ್ನ ಕನ್ನಡಕದ ಹಿಂದಿನ ಕಣ್ಣುಗಳಿಂದ ದಿಟ್ಟಿಸುತ್ತ ಆಕೆ ನನಗೆ ಕಥೆ ಹೇಳುವಳು. ವಯಸ್ಸು ಆಕೆಯ ದೃಷ್ಟಿಯನ್ನು ಮಸುಕಾಗಿಸಿತ್ತಾದರೂ ನನಗೆ ಆಕೆಯ ಕಣ್ಣುಗಳು ಅಗಾಧವಾಗಿ, ಇರುವುದಕ್ಕಿಂತ ಎರಡುಪಟ್ಟು ದೊಡ್ಡದಾಗಿವೆಯೇನೊ ಅನ್ನಿಸುತ್ತಿದ್ದವು.
ಆಕೆ ನನಗೆ ಹೇಳುತ್ತಿದ್ದ ಸಂಗತಿಗಳು ಮತ್ತು ಅದರಿಂದ ವಿಚಲಿತವಾಗುತ್ತಿದ್ದ ನನ್ನ  ಹೃದಯವನ್ನು  ನೆನಪಿಸಿಕೊಳ್ಳುವುದಾದರೆ ಆಕೆ ವಿಶಾಲ ಹೃದಯದ ಬಡಹೆಂಗಸಾಗಿದ್ದಳು ಅನ್ನಿಸುತ್ತದೆ. ಹಳ್ಳಿಯಲ್ಲಿ ಏನೇನು ನಡೆಯುತ್ತಿತ್ತು ಎಂದು ಆಕೆ ನನಗೆ ತಿಳಿಸುವಳು. ದೊಡ್ಡಿಯಿಂದ ತಪ್ಪಿಸಿಕೊಂಡ ಹಸುವೊಂದು ಮಲ್ಲಪ್ಪನ ಮಿಲ್ಲಿನ ಬಳಿ ಮಿಶೀನು ತಿರುಗುವುದನ್ನೆ ನೋಡುತ್ತ ನಿಂತಿದ್ದಿದ್ದು, ಚರ್ಚಿನ ಗೋಪುರದ ಮೇಲೆ ಒಂದು ಮೊಟ್ಟೆ ಸಿಕ್ಕಿದ್ದು ಮತ್ತು ಅದನ್ನು ಅಲ್ಲಿಡಲು ಯಾವ ಪ್ರಾಣಿ ಅಲ್ಲಿಯವರೆಗೆ ಹೋಗಿತ್ತು ಎಂದು ಯಾರಿಗೂ ಅರ್ಥವಾಗದೇ ಇದ್ದಿದ್ದು, ಮಳೆಯಲ್ಲಿ ನೆನೆದು ಒದ್ದೆಯಾದವೆಂದು ಒಣಹಾಕಿದ್ದ ಪಿಳ್ಳಯ್ಯನ ಸಾಕ್ಸುಗಳನ್ನು ಕದ್ದುಕೊಂಡುಹೋದ ಭಿಕ್ಷುಕನನ್ನೊಬ್ಬನನ್ನು ಸುಮಾರು ಹದಿನೈದು ಮೈಲಿಗಳವರೆಗೆ ಫಾಲೋ ಮಾಡಿ ಅವನ್ನು ವಾಪಾಸು ತೆಗೆದೊಕೊಂಡು ಬಂದ ಅವನ ನಾಯಿಯ ವಿಚಿತ್ರ ಕಥೆ.. ಇಂತಹ ಕಥೆಗಳನ್ನೆಲ್ಲ ಆಕೆ ನನಗೆ ಹೇಗೆ ಹೇಳುತ್ತಿದ್ದಳೆಂದರೆ ನನ್ನ ಮನಸ್ಸಿನಲ್ಲಿ ಅವು ಮರೆಯಲಾಗದ ನಾಟಕಗಳಂತೆ, ಅದ್ದೂರಿಯಾದ ನಿಗೂಢ ಕವಿತೆಗಳಂತೆ ಮತ್ತು ಕವಿಗಳು ಹುಟ್ಟುಹಾಕಿದ ಅಪೂರ್ವ ಕಥೆಗಳಂತೆ ತೋರುತ್ತಿದ್ದವು ಮತ್ತು ಇವನ್ನೆಲ್ಲ ಸಂಜೆ ನನ್ನಮ್ಮ ನನಗೆ ಹೇಳುತ್ತಿದ್ದಳಾದರೂ ಅವು ಆ ರೈತಾಪಿ ಹೆಂಗಸು ಹೇಳುತ್ತಿದ್ದ ಸಂಗತಿಗಳ ರುಚಿ, ಸಂಪೂರ್ಣತೆ ಅಥವಾ ಚೈತನ್ಯವನ್ನು ಹೊಂದಿರಲಿಲ್ಲ.
ಇಂತಹದೇ ಒಂದು ಗುರುವಾರ ಬೆಳಿಗ್ಗೆಯಿಡೀ ವಲ್ಲಿಯಮ್ಮನ ಮಾತು ಕೇಳುತ್ತ ಕಳೆದು ತೋಟದ ಹಿಂದಿನ ಕಾಡಿನಲ್ಲಿ ಆಳುಗಳ ಜತೆ ನೆಲ್ಲೀಕಾಯಿಗಳನ್ನು ಆರಿಸಿದ ಮೇಲೆ ನನಗೆ ವಲ್ಲಿಯಮ್ಮನ ಕೋಣೆಗೆ ಮತ್ತೆ ಹೋಗಬೇಕೆನಿಸಿತು. ಆ ದಿನ ಇನ್ನೂ ನನಗೆ ನಿನ್ನೆ ನಡೆದ ಹಾಗೆ ನೆನಪಿದೆ.
ಹೊಲಿಗೆಕೋಣೆಯ ಬಾಗಿಲು ದೂಡಿದಾಗ ಆ ದರ್ಜಿ ಮುದುಕಿ ಕುರ್ಚಿಯ ಬಳಿಯ ನೆಲದ ಮೇಲೆ ಬಿದ್ದಿರುವುದು ನನಗೆ ಕಾಣಿಸಿತು. ಆಕೆಯ ಮುಖ ಬೋರಲಾಗಿತ್ತು ಮತ್ತು ಆಕೆಯ ಕೈಗಳು ಉದ್ದಕ್ಕೆ ಚಾಚಿದ್ದವು. ಆದರೆ ಒಂದು ಕೈಯಲ್ಲಿ ಸೂಜಿ ಮತ್ತು ಇನ್ನೊಂದು ಕೈಯಲ್ಲಿ ಒಂದು ಶರ್ಟು ಹಾಗೇ ಇದ್ದವು. ಆಕೆಯ ಹೆಚ್ಚು ಉದ್ದನೆಯ ಕಾಲು ಆಕೆ ಕೂತಿದ್ದ ಕುರ್ಚಿಯಡಿ ಚಾಚಿಕೊಂಡಿತ್ತು ಮತ್ತು ಆಕೆಯಿಂದ ದೂರ ಉರುಳಿಕೊಂಡು ಹೋಗಿದ್ದ ಕನ್ನಡಕ ಗೋಡೆಯ  ಬಳಿ ಹೊಳೆಯುತ್ತಿತ್ತು.
ನಾನು ಜೋರಾಗಿ ಕಿರುಚುತ್ತಾ ಅಲ್ಲಿಂದ ಓಡಿಹೋದೆ. ಅವರೆಲ್ಲ ಓಡುತ್ತ ಬಂದರು ಮತ್ತು ಕೆಲವೇ ನಿಮಿಷಗಳಲ್ಲಿ ವಲ್ಲಿಯಮ್ಮ ಸತ್ತುಹೋದರೆಂದು ನನಗೆ ತಿಳಿಸಿದರು.
ನನ್ನ ಬಾಲಹೃದಯವನ್ನು ಹಿಡಿದಲ್ಲಾಡಿಸಿದ ಆ ಅಗಾಧ, ಮನೋಭೇದಕ, ದಾರುಣವಾದ ನೋವನ್ನು ವಿವರಿಸಲಾರೆ. ನಾನು ಮೆಲ್ಲಗೆ ಹಜಾರಕ್ಕೆ ಹೋಗಿ ದೊಡ್ಡ, ಹಳೆಯ ಕುರ್ಚಿಯೊಂದರ ಆಳಗಳಲ್ಲಿ ಅವಿತು ಕೂತುಕೊಂಡು ಅಳತೊಡಗಿದೆ. ಅಲ್ಲಿಯೇ ನಾನು ಸುಮಾರುಹೊತ್ತು ಕೂತಿರಬೇಕು, ಏಕೆಂದರೆ ರಾತ್ರಿಯಾಯಿತು. ಇದ್ದಕ್ಕಿದ್ದಂತೆ ಅಲ್ಲಿಗೆ ಯಾರೋ ಒಂದು ದೀಪ ಹಿಡಿದುಕೊಂಡು ಬಂದರು..ಅವರಿಗೆ ನಾನು ಕಾಣಿಸಿರಲಿಕ್ಕಿಲ್ಲ..ಮತ್ತು ನನಗೆ ನನಗೆ ಪರಿಚಿತವಿದ್ದ ವೈದ್ಯರ ದನಿಯು ನನ್ನ ಅಪ್ಪ, ಅಮ್ಮನ ಜತೆ ಮಾತನಾಡುವುದು ನನಗೆ ಕೇಳತೊಡಗಿತು.
ಅವರಿಗೆ ಕೂಡಲೆ ಹೇಳಿಕಳಿಸಲಾಗಿತ್ತು ಮತ್ತು ಅವರು ಸಾವಿನ ಕಾರಣವನ್ನು ವಿವರಿಸುತ್ತಿದ್ದಿದ್ದು ನನಗೇನೂ ಅರ್ಥವಾಗಲಿಲ್ಲ. ಆಮೇಲೆ ಅವರು ಕೂತುಕೊಂಡು ಕೊಂಚ ಕಾಫಿ ಮತ್ತು ಬಿಸ್ಕೀಟುಗಳನ್ನು ಸೇವಿಸಿದರು.
ಆವರು ಮಾತನಾಡುತ್ತಲೇ ಇದ್ದರು ಮತ್ತು ಅಂದು ಅವರು ಹೇಳಿದ್ದು ಸಾಯುವವರೆಗೂ ನನ್ನ ಮನಸ್ಸಿನಿಂದ ಮರೆಯಾಗಲಿಕ್ಕಿಲ್ಲ. ನಾನು ಅವರು ಹೇಳಿದ ಮಾತುಗಳನ್ನು ಅಂತೆಯೇ ಪುನರಾವರ್ತಿಸಬಲ್ಲೆ  ಅನ್ನಿಸುತ್ತದೆ ನನಗೆ.
“ಆಹ್!!” ಆತ ಹೇಳಿದರು. “ಪಾಪದ ಹೆಂಗಸು! ನಾನು ಇಲ್ಲಿಗೆ ಬಂದ ದಿನವೇ ಆಕೆ ಕಾಲು ಮುರಿದುಕೊಂಡದ್ದು. ನಾನು ಡ್ಯೂಟಿ ಮುಗಿಸಿ ಕೈತೊಳಿದಿರಲಿಕ್ಕೂ ಇಲ್ಲ, ಅರ್ಜೆಂಟಾಗಿ ಹೇಳಿಕಳಿಸಿದರು. ಬಹಳ ಕೆಟ್ಟ ಕೇಸಾಗಿತ್ತು ಅದು, ಬಹಳ ಕೆಟ್ಟದಾಗಿತ್ತು ಸ್ಥಿತಿ.”
“ಆಗ ಅವಳಿಗೆ ಹದಿನೇಳು ವರ್ಷ ಮತ್ತು ಚೆಂದದ ಹುಡುಗಿ, ಬಲು ಚೆಂದ! ಯಾರಾದರು ನಂಬ್ತಾರೆಯೆ? ನಾನು ಅವಳ ಕಥೇನ ಇದಕ್ಕೆ ಮುಂಚೆ ಹೇಳಿಯೇ ಇಲ್ಲ; ನಿಜ ಹೇಳಬೇಕೆಂದರೆ ಇದು ನನಗೆ ಮತ್ತು ಇನ್ನೊಂದು ವ್ಯಕ್ತಿಗೆ ಮಾತ್ರ ಗೊತ್ತಿರುವುದು, ಹಾಗೂ ಆ ವ್ಯಕ್ತಿ ಈಗ ಈ ಕಡೆಯಲ್ಲೆಲ್ಲು ವಾಸವಾಗಿಲ್ಲ. ಈಗ ಆಕೆ ಸತ್ತುಹೋಗಿರೋದರಿಂದ ನಾನು ಈ ವಿಷಯದ ಬಗ್ಗೆ ಮಾತನಾಡಬಹುದು ಅಂತ ಕಾಣುತ್ತೆ.
ಹಳ್ಳಿಗೆ ಆ ಅಸಿಸ್ಟೆಂಟ್ ಟೀಚರ್ ವಾಸವಾಗಿರಲು ಆಗಷ್ಟೆ ಬಂದಿದ್ದ; ನೋಡಲು ಚೆನ್ನಾಗಿದ್ದ ಅವ ಮಿಲಿಟರಿಯವನ ಹಾಗಿದ್ದ. ಎಲ್ಲ ಹುಡುಗಿಯರೂ ಅವನ ಹಿಂದೆಯೇ ಬಿದ್ದಿದ್ದರೂ ಅವನು ಮಾತ್ರ ತಾತ್ಸಾರದಿಂದಲೆ ಇದ್ದ. ಇದಲ್ಲದೆ ಅವನಿಗೆ ತನ್ನ ಮೇಲಧಿಕಾರಿಯಾಗಿದ್ದ ಶಾಲಾ ಮಾಸ್ತರ ಮುದುಕ ಗೌರೀಶನ ಬಗ್ಗೆ ಬಹಳ ಭಯವಿತ್ತು. ಈ ಗೌರೀಶ ಯಾವಾಗಲೂ ಹಾಸಿಗೆಯಿಂದೇಳುವಾಗ ಎಡಬದಿಗೇ ಏಳುತ್ತಿದ್ದ ಎನ್ನುವ ಹಾಗಿದ್ದ.
ಮುದುಕ ಗೌರೀಶ ಅದಾಗಲೇ ಈಗ ಸತ್ತುಹೋಗಿದಾಳಲ್ಲ, ಅದೇ ಪುಷ್ಪವಲ್ಲಿಯನ್ನ ಕೆಲಸಕ್ಕಿಟ್ಟುಕೊಂಡಿದ್ದ, ಅದು ಆವಾಗ ಆಕೆಯ ಹೆಸರು, ಆಮೇಲೆ ಆಕೆಗೆ ಈಗ ವಲ್ಲಿಯಮ್ಮ ಅಂತ ನೀವೆಲ್ಲ ಕರೀತೀರಲ್ಲ ಆ ಆಡ್ಡಹೆಸರು ಬಂದಿದ್ದು. ಯುವ ಅಸಿಸ್ಟೆಂಟ್ ಮಾಸ್ತರ ಈ ಚೆಂದದ ಹುಡುಗಿಯನ್ನ ತನಗಾಗಿ ಆಯ್ದುಕೊಂಡ ಮತ್ತು ಆ ಹುಡುಗಿಯೂ ಈ ತಾತ್ಸಾರಮನೋಭಾವದ ಯೋಧ ತನ್ನನ್ನು ಆಯ್ಕೆಮಾಡಿಕೊಂಡದ್ದನ್ನೆ ಗೌರವ ಎಂದು ಭಾವಿಸಿದಳು. ಏನಾದರಾಗಲಿ, ಆಕೆ ಆತನನ್ನು ಪ್ರೇಮಿಸತೊಡಗಿದಳು ಮತ್ತು ಆತ ಆಕೆಯನ್ನು ದಿನದ ಹೊಲಿಗೆ ಕೆಲಸವೆಲ್ಲ ಮುಗಿದ ನಂತರ ಶಾಲೆಯ ಹಿಂದೆಯೇ ಇದ್ದ ಹುಲ್ಲಿನ ಬಣವೆಯಲ್ಲಿ ಮೊದಲ ಬಾರಿಗೆ ಭೇಟಿಯಾಗಲು ಬರುವಂತೆ ಮನವೊಲಿಸಿದ.
ಅವಳು ಮನೆಗೆ ಹೋಗುವವಳ ಹಾಗೆ ನಟಿಸಿದಳು ಮತ್ತು ಕೆಳಗೆ ಹೋಗುವುದಕ್ಕೆ ಬದಲಾಗಿ ಅವಳು ಮೇಲೆ ಹೋಗಿ ತನ್ನ ಪ್ರಿಯತಮನಿಗಾಗಿ ಕಾಯುತ್ತ ಹುಲ್ಲಿನಲ್ಲಿ ಅಡಗಿಕೊಂಡಳು. ಕೆಲ ಸಮಯದಲ್ಲೆ ಆತನೂ ಬಂದ, ಮತ್ತು ಆಕೆಯ ಬಳಿ ಚೆಂದದ ಮಾತುಗಳನ್ನಾಡಲು ತೊಡಗಿದ. ಆಗ ಬಣವೆಯಿದ್ದ ಕೊಟ್ಟ್ತಿಗೆಯ ಬಾಗಿಲು ತೆರೆದುಕೊಂಡಿತು ಮತ್ತು ಅಲ್ಲಿ ಕಾಣಿಸಿಕೊಂಡ ಶಾಲಾ ಮಾಸ್ತರ ಕೇಳಿದ
“ಅಲ್ಲೇನು ಮಾಡ್ತಿದೀಯ ಸುಧಾಕರ?”.
ತಾನು ಸಿಕ್ಕಿಹಾಕಿಕೊಳ್ಳುವುದು ಖಚಿತವೆಂದುಕೊಳ್ಳುತ್ತ ಆ ಯುವಕ ಮಾಸ್ತರನ ಯುಕ್ತಿಯೆಲ್ಲ ಎತ್ತಲೋ ಹಾರಿಹೋಯಿತು ಮತ್ತು ಅವ ಪೆದ್ದುಪೆದ್ದಾಗಿ ಉತ್ತರಿಸಿದ: ‘ನಾನು ಹುಲ್ಲಿನ ಮೇಲೆ ಮಲಕೊಂಡು ಕೊಂಚ ವಿಶ್ರಾಂತಿ ತಗೊಳೋಣ ಅಂತ ಬಂದೆ, ಅಷ್ಟೆ ಸಾರ್.’
ಆ ಕೊಟ್ಟಿಗೆ ಬಲು ದೊಡ್ಡದಾಗಿತ್ತು ಮತ್ತೆ ಅಲ್ಲಿ ಸಿಕ್ಕಾಬಟ್ಟೆ ಕತ್ತಲಿತ್ತು. ಸುಧಾಕರ ಆ ಹುಡುಗಿಯನ್ನ ಒಂದು ಕಡೆ ದೂಕಿ ಹೇಳಿದ: ‘ಆಕಡೆಗೆ ಹೋಗಿ ಅವಿತುಕೋ. ನನ್ನ ಪರಿಸ್ಥಿತಿ ಚೆನ್ನಾಗಿಲ್ಲ, ಆದ್ರಿಂದ ದೂರ ಹೋಗಿ ಬಚ್ಚಿಟ್ಟುಕೋ’
ಈ ಪಿಸುಗುಟ್ಟುವಿಕೆಯನ್ನ ಕೇಳಿಸಿಕೊಂಡ ಶಾಲಾಮಾಸ್ತರ ಮುಂದುವರಿಸಿದ: ‘ಯಾಕೆ, ಅಲ್ಲಿ ನೀನೊಬ್ಬನೇ ಇಲ್ಲಾಂತ ಕಾಣುತ್ತೆ.’
’ನಾನೊಬ್ನೇ ಇದೀನಿ ಸಾರ್ ಇಲ್ಲಿ!’
’ಇಲ್ಲ, ಯಾಕಂದ್ರೆ ನೀನು ಮಾತಾಡ್ತಾ ಇದೀಯ.’
’ನಾನು ಆಣೆ ಮಾಡಿ ಹೇಳ್ತೀನಿ ಸಾರ್’
’ನಾನು ಬೇಗದಲೆ ಕಂಡು ಹಿಡೀತೀನಿ’  ಆ ಮುದುಕ ಹೇಳಿದ ಮತ್ತೆ ಕೊಟ್ಟಿಗೆಯ ಬಾಗಿಲಿಗೆ ಎರಡೆರಡು ಬೀಗ ಹಾಕಿ ಬೆಳಕು ತರಲು ಹೊರಹೋದ.
ಇಂಥಾ ಪರಿಸ್ಥಿತಿಗಳಲ್ಲಿ ಕೆಲವೊಮ್ಮೆ ಹೇಡಿಗಳು ಕಂಡುಬರುವ ಹಾಗೆ ಆ ಯುವಕ ತನ್ನ ಸ್ಥಿಮಿತ ಕಳೆದುಕೊಂಡು ಇದ್ದಕ್ಕಿದ್ದಹಾಗೆ ಕುಪಿತನಾಗಿ ಪದೇಪದೇ ಹೇಳತೊಡಗಿದ: ‘ಬಚ್ಚಿಟ್ಟುಕೋ, ಅವನು ನಿನ್ನನ್ನ ಕಂಡುಹಿಡೀಕೂಡದು. ನಿನ್ನಿಂದ ನನ್ನ ಜೀವನವಿಡೀ ಸಂಪಾದನೆಗೆ ಸಂಚಕಾರ ಬಂದುಬಿಡತ್ತೆ; ನಿನ್ನಿಂದಾಗಿ ನನ್ನ ವೃತ್ತಿಜೀವನವೇ ಹಾಳಾಗಿಹೋಗತ್ತೆ! ಮೊದ್ಲು ಅವಿತುಕೋ!’
ಅವರಿಗೆ ಮತ್ತೆ ಬೀಗ ತೆರೆಯುವ ಸದ್ದು ಕೇಳಿಸಿತು ಮತ್ತು ಪುಷ್ಪವಲ್ಲಿ ಬೀದಿಯ ಕಡೆಗೆ ಇದ್ದ ಕಿಟಕಿಯ ಕಡೆಗೆ ಓಡಿ ಬಲುಬೇಗನೆ ಅದನ್ನು ತೆರೆದವಳೇ ತಗ್ಗಿದ ಆದರೆ ನಿರ್ಣಾಯಕ  ದನಿಯಲ್ಲಿ ಹೇಳಿದಳು:
‘ಆತ ಹೋದ ನಂತರ ನೀನು ಬಂದು ನನ್ನನ್ನ ಕರೆದುಕೊಂಡು ಹೋಗಬೇಕು,’ ಮತ್ತೆ ಅವಳು ಹೊರಗೆ ಹಾರಿದಳು.
ಮುದುಕ ಗೌರೀಶಪ್ಪನಿಗೆ ಯಾರೂ ಕಾಣಲಿಲ್ಲ ಮತ್ತು ಅಚ್ಚರಿಪಡುತ್ತ ಆತ ಕೆಳಗೆ ಹೊರಟುಹೋದ! ಕಾಲುಗಂಟೆ ಕಳೆದನಂತರ ಸುಧಾಕರ ನನ್ನ ಹತ್ತಿರ ಬಂದವನೇ ತನ್ನ ಸಾಹಸದ ಬಗ್ಗೆ ತಿಳಿಸಿದ. ಆ ಹುಡುಗಿ ಎರಡನೆ ಮಹಡಿಯಿಂದ ಬಿದ್ದಿದ್ದರಿಂದ ಏಳಲಿಕ್ಕಾಗದೆ ಗೋಡೆಗೆ ಒರಗಿಕೊಂಡು ಕೂತೇ ಇದ್ದಳು. ನಾನು ಅವನ ಜತೆ ಆಕೆಯನ್ನ ಕರೆದುಕೊಂಡು ಹೋಗಲು ಹೋದೆ. ಮಳೆ ಜೋರಾಗಿ ಸುರಿಯುತ್ತಲೇ ಇತ್ತು ಮತ್ತು ಆ ದುರದೃಷ್ಟವಂತೆಯಾದ ಹುಡುಗಿಯನ್ನ ನನ್ನ ಮನೆಗೆ ಕರೆದುಕೊಂಡು ಬಂದೆ, ಏಕೆಂದರೆ ಆಕೆಯ ಬಲಗಾಲು ಮೂರು ಜಾಗಗಳಲ್ಲಿ ಮುರಿದುಹೋಗಿತ್ತು ಮತ್ತು ಮೂಳೆಗಳು ಮಾಂಸದಿಂದ ಈಚೆಗೆ ಬಂದುಬಿಟ್ಟಿದ್ದವು. ಅವಳು ನೋವಿನ ಬಗ್ಗೆ ಏನೂ ದೂರು ಹೇಳಲಿಲ್ಲ, ಆದರೆ ಶ್ಲಾಘನೀಯವೆನ್ನಬಹುದಾದ ತಾಳ್ಮೆಯೊಂದಿಗೆ ಉಸುರಿದಳು: ‘ನನಗೆ ಶಿಕ್ಷೆ ದೊರಕಿತು, ಒಳ್ಳೆಯ ಶಿಕ್ಷೆಯೇ ದೊರಕಿತು!’
ನಾನು ಸಹಾಯಕ್ಕಾಗಿ ಹೇಳಿಕಳಿಸಿದೆ ಮತ್ತು ಆಕೆಯ ಸ್ನೇಹಿತರನ್ನೂ ಕರೆಸಿದೆ ಮತ್ತು ಅವರಿಗೆಲ್ಲ ಆಕೆಯನ್ನು ನನ್ನ ಮನೆಯೆದುರಿಗೆ ಯಾವುದೋ ಗಾಡಿ ಗುದ್ದಿ ತಪ್ಪಿಸಿಕೊಂಡು ಹೊರಟುಹೋಯಿತೆಂದು ಎಂಥದೋ ಕಥೆಕಟ್ಟಿ ಹೇಳಿದೆ. ಅವರು ಅದನ್ನು ನಂಬಿದರು ಮತ್ತು ಪೊಲೀಸರು ಒಂದು ತಿಂಗಳವರೆಗೆ ಈ ಅಪಘಾತಕ್ಕೆ ಯಾರು ಕಾರಣರಿರಬಹುದು ಎಂದು ಹುಡುಕಾಡಿ ತಲೆಕೆಡಿಸಿಕೊಂಡರು.
ಅಷ್ಟೆ! ಈಗ ನಾನು ಹೇಳುವುದೇನೆಂದರೆ ಈ ಹುಡುಗಿ ಒಬ್ಬ ಹೀರೋಯಿನ್ ಮತ್ತು ಇತಿಹಾಸದಲ್ಲಿ ದೊಡ್ಡದೊಡ್ಡ ಸಾಧನೆ ಮಾಡಿದವರಷ್ಟು ದಮ್ ಇರುವವಳಾಗಿದ್ದಳು ಅಂತ.
ಅದು ಆಕೆಯ ಏಕೈಕ ಪ್ರೇಮಸಂಬಂಧವಾಗಿತ್ತು, ಮತ್ತು ಆಕೆ ಕುಮಾರಿಯಾಗಿಯೇ ಸತ್ತಳು. ಆಕೆ ಒಬ್ಬ ಹುತಾತ್ಮಳಾಗಿದ್ದಳು, ಒಂದು ಉದಾತ್ತ ಆತ್ಮವನ್ನು ಹೊಂದಿದ ಶ್ರೇಷ್ಠ ಹೆಣ್ಣಾಗಿದ್ದಳು! ಆಕೆಯನ್ನು ಬಹಳ ಗೌರವಿಸದೆ ಹೋಗಿದ್ದಲ್ಲಿ ನಾನು ಈ ಕಥೆಯನ್ನು ನಿಮಗೆ ಹೇಳುತ್ತಿರಲಿಲ್ಲ ಮತ್ತು ಆಕೆ ಬದುಕಿದ್ದಾಗ ಯಾರಿಗೂ ಹೇಳಲೂ ಇಲ್ಲ; ಯಾಕೆ ಅಂತ ನಿಮಗೆ ಅರ್ಥವಾಗಿರಬಹುದು.”
ವೈದ್ಯರು ಮಾತು ನಿಲ್ಲಿಸಿದರು; ಅಮ್ಮ ಅಳುತ್ತಿದ್ದಳು ಮತ್ತು ಅಪ್ಪ ಏನೋ ಹೇಳಿದ್ದು ನನಗೆ ಸರಿಯಾಗಿ ತಿಳಿಯಲಿಲ್ಲ; ಆಮೇಲೆ ಅವರೆಲ್ಲ ಕೋಣೆಯಿಂದ ಆಚೆ ಹೋದರು. ನಾನು ಕುರ್ಚಿಯ  ಮೇಲೆ ಮಂಡಿಯೂರಿ ಕುಳಿತು ಅಳುತ್ತಲೇ ಇದ್ದೆ. ಆಗಲೆ ನನಗೆ ಭಾರವಾದ ಹೆಜ್ಜೆಗಳು ಮತ್ತು ಸ್ಟೇರ್‌ಕೇಸಿಗೆ  ಏನೋ ತಗುಲುತ್ತಿರುವಹಾಗೆ ವಿಚಿತ್ರವಾದ ಸದ್ದುಗಳು ಕೇಳಿದವು.
ಅವರು ಪುಷ್ಪವಲ್ಲಿಯ ದೇಹವನ್ನು ಕೊಂಡೊಯ್ಯುತ್ತ ಇದ್ದರು.
ಚಿತ್ರಕೃಪೆ: www.toruiwaya.com

ಅಕ್ಕರೆಗೆ ಭೇದಭಾವವೆ? ಎಂದು ಪ್ರಶ್ನಿಸುವ ’ದ ಬ್ಲೈಂಡ್ ಸೈಡ್’

7 Comments

ನಿಜಜೀವನದಲ್ಲಿ ಮೈಕೆಲ್ ತನ್ನ ಅಪ್ಪ ಅಮ್ಮಂದಿರೊಂದಿಗೆ.. ಗೇಮ್ ಒಂದರ ಸಂದರ್ಭದಲ್ಲಿ..

ಬೆಂಗಳೂರಿನ ಬೀದಿಗಳಲ್ಲಿ ನಮ್ಮನಮ್ಮ ವಾಹನಗಳಲ್ಲಿ ಕೂತು ಓಡಾಡುವಾಗ ಕಳೆದುಹೋದ ಭಾವ ಹೊತ್ತು ಅದೂ ಇದೂ ಮಾರಿಕೊಂಡು ತಿರುಗಾಡುವ ಎಷ್ಟೊಂದು ಮಕ್ಕಳನ್ನು ನಾವು ನೋಡಿಲ್ಲ? ನಮ್ಮ ಮನೆಯ ಮಗು ಸಣ್ಣದೊಂದು ತರಚುಗಾಯ ಮಾಡಿಕೊಂಡರು ಒದ್ದಾಡುವ ನಾವು ತೊಂದರೆಯಲ್ಲಿರುವ ನೂರಾರು ಮಕ್ಕಳನ್ನು ಕಂಡೂ ಕಾಣದ ಹಾಗೆ ಮುಂದೆ ಸಾಗುತ್ತೇವೆ. ಪ್ರತಿದಿನ ಬೆಳಗ್ಗೆ ನಾವು ದಿನಪತ್ರಿಕೆಗಳಲ್ಲಿ ಕೊಂಚ ದುಡ್ಡು ವಿನಿಯೋಗಿಸಿ ಹಸಿದ ಮಕ್ಕಳಿಗೆ ಊಟ, ವಿದ್ಯೆ ನೀಡುವಂತೆ ಕೋರುವ ಜಾಹೀರಾತುಗಳನ್ನು ಕಾಣುತ್ತೇವೆ. ಹಾಗೇ ಮುಂದಿನ ಪುಟಕ್ಕೆ ಹೋಗುತ್ತೇವೆ. ಎಷ್ಟೋ ಮನೆಗಳಲ್ಲಿ ಸಣ್ಣ ಮಕ್ಕಳನ್ನು ಕೆಲಸಕ್ಕಿಟ್ಟುಕೊಂಡಿರುವುದನ್ನು ನೋಡಿಯೂ ನೋಡದಂತೆ ಇದ್ದುಬಿಡುತ್ತೇವೆ.  ಇಂತಹ ಮಕ್ಕಳಿಗೆಲ್ಲ ಸರಿಯಾದ ಶಿಕ್ಷಣ, ಸೂರು, ಹೊಟ್ಟೆತುಂಬ ಊಟ ದೊರಕಿದರೆ ಇವರ ನಡುವಿನಿಂದ ಅದೆಂತಹ ಪ್ರತಿಭೆಗಳು ಹೊರಹೊಮ್ಮುವವೊ? ಹೀಗೂ ಆಗಬಹುದು ಅನ್ನುವುದಕ್ಕೆ ಒಂದು ಚಲನಚಿತ್ರ ಸಾಕ್ಷಿಯಾಗಿದೆ.
ಮತ್ತು ಅದಕ್ಕೆ 2010ರ ಆಸ್ಕರ್ ಪ್ರಶಸ್ತಿ ದೊರಕಿದೆ.
‘ದ ಬ್ಲೈಂಡ್ ಸೈಡ್’ನ ಕಥೆ ನಿಜವಾಗಿ ನಡೆದಿದ್ದು. ಧೋ ಎಂದು ಸುರಿಯುತ್ತಿರುವ ಮಳೆಯಲ್ಲಿ ಒಂದು ರಾತ್ರಿ ತನ್ನ ಕುಟುಂಬದೊಂದಿಗೆ ಕಾರಿನಲ್ಲಿ ಮನೆಗೆ ವಾಪಾಸು ತೆರಳುತ್ತಿರುವ ಲೀ ಆನ್ ಮಳೆಯಲ್ಲಿ ನೆನೆದುಕೊಂಡು ಹೋಗುತ್ತಿರುವ ಕಪ್ಪು ಅಮೆರಿಕನ್ ಹುಡುಗನೊಬ್ಬನನ್ನು ಕಂಡು ಕಾರು ನಿಲ್ಲಿಸುತ್ತಾಳೆ. ಏನು ಕೇಳಿದರೂ ಉತ್ತರಿಸದ ಆ ಹುಡುಗನಿಗೆ ಅಂದು ರಾತ್ರಿ ಲೀ ಆನ್ ಮತ್ತವಳ ಪತಿ ಶಾನ್ ತಮ್ಮ ಮನೆಯಲ್ಲಿಯೇ ಆಶ್ರಯ ನೀಡುತ್ತಾರೆ. ಒಂದು ದಿನದ ಆಶ್ರಯ ಹಲವಾರು ದಿನಗಳವರೆಗೆ ಮುಂದುವರೆಯುತ್ತದೆ. ದೊಡ್ಡ ದೇಹದ ಮಗುವಾಗಿರುವ ಹುಡುಗ ಮೈಕೆಲ್ ಓಹೆರ್ ಬಗ್ಗೆ ಲೀ ಆನಳ ಭಾವನೆಗಳು ಕರುಣೆಯಿಂದ ಅಕ್ಕರೆಯೆಡೆಗೆ ಬದಲಾಗತೊಡಗುತ್ತವೆ. ಆಕೆಯ ಇಡೀ ಕುಟುಂಬ ಮೈಕೆಲನನ್ನು ತಮ್ಮ ಕುಟುಂಬದ ಸದಸ್ಯನಂತೆ ನಡೆಸಿಕೊಳ್ಳತೊಡಗುತ್ತಾರೆ. ಆತನನ್ನು ದತ್ತುತೆಗೆದುಕೊಳ್ಳಬೇಕೆಂದು ಬಯಸುವ ಲೀ ಆನ್ ಮೈಕೆಲನನ್ನು ಅಮೆರಿಕನ್ ಫುಟ್ಬಾಲ್ ಆಟದ ತರಬೇತಿಗೆ ಕರೆದೊಯ್ಯತೊಡಗುತ್ತಾಳೆ. ಅಲ್ಲಿ ಮೊದಮೊದಲು ಎಡವಿದರೂ ನಂತರ ಮೈಕೆಲ್ ತೋರಿಸುವ ಪ್ರಗತಿ ಎಲ್ಲರನ್ನು ಆಶ್ಚರ್ಯಚಕಿತರನ್ನಾಗಿ ಮಾಡುತ್ತದೆ.
ಆದರೆ ಎಲ್ಲವೂ ಅಂದುಕೊಂಡಷ್ಟು ಸುಲಭವಿಲ್ಲ.
ಹಾರ್ಲೆಮ್ಮಿನ ಕಪ್ಪು ಅಮೆರಿಕನ್ ಬೀದಿಗಳಿಂದ ಬಂದಿರುವ ಮೈಕೆಲ್ ಬಹಳ ಹಿಂಸಾಚಾರದಿಂದ ಕೂಡಿದ ದಿನಗಳನ್ನು ಕಂಡಿದ್ದವನು. ಆತನ ತಾಯಿಗೆ ಮದ್ಯಪಾನದ ವ್ಯಸನ. ಸುತ್ತಮುತ್ತಲು ದುಂಡಾವರ್ತಿ ಹುಡುಗರು. ಮೇಲಾಗಿ ಒಬ್ಬ ಶ್ರೀಮಂತವರ್ಗದ ಬಿಳಿಯ ಮಹಿಳೆ ಒಬ್ಬ ಕಪ್ಪುಜನಾಂಗದ ಹುಡುಗನನ್ನು ದತ್ತುತೆಗೆದುಕೊಳ್ಳುವುದೆಂದರೆ? ಹಲವಾರು ಹುಬ್ಬುಗಳು ಮೇಲೇರುತ್ತವೆ. ದತ್ತುತೆಗೆದುಕೊಳ್ಳುವಿಕೆಯನ್ನು ನಿರ್ವಹಿಸುವ ಮಹಿಳಾಧಿಕಾರಿಯೂ ಕೂಡ ಮೈಕೆಲ್ ಯಾವುದೋ ಒತ್ತಡದಲ್ಲಿದ್ದಾನೆಂದು,  ಮತ್ತು  ಲೀ ಆನಳ ಬಯಕೆಯ ಹಿಂದೆ ಬೇರಾವುದೋ ಲಾಭದ ದುರುದ್ದೇಶವಿದೆಯೆಂದು ಭಾವಿಸಿ ಮೈಕೆಲನ ಮೇಲೆ ಅನಾವಶ್ಯಕ ಒತ್ತಡ ಹೇರತೊಡಗುತ್ತಾಳೆ. ಮೈಕೆಲನ ಹಿಂದಿನ ಸಂಗಾತಿಗಳು ಆತನ ಬದಲಾದ ಜೀವನವನ್ನು ಕಂಡು ಹೀಯಾಳಿಸತೊಡಗುತ್ತಾರೆ. ಅವರ ಪ್ರಕಾರ ಬಿಳಿಯರು ನೀಡಿದ್ದೆಲ್ಲವೂ ಎಂಜಲೇ. ಅದನ್ನು ಸ್ವೀಕರಿಸುವುದು ಅವರಿಗೆ ಆಗಿಬರದು.
ಈ ಎಲ್ಲಾ ಅಂತರಿಕ, ಬಾಹ್ಯ ಒತ್ತಡಗಳ ನಡುವೆಯೂ ಲೀ ಆನ್ ಮತ್ತು ಮೈಕೆಲರ ನಡುವಿನ ತಾಯಿ-ಮಗನ ಬಾಂಧವ್ಯ ಗಟ್ಟಿಯಾಗಿ ಹೊರಹೊಮ್ಮುತ್ತದೆ. ಮಾನವೀಯತೆ, ಪ್ರೇಮ, ಅಕ್ಕರೆಗಳು ಬಣ್ಣ, ಜಾತಿ, ವರ್ಗ, ಧರ್ಮ ಏನನ್ನೂ ಬಯಸುವುದಿಲ್ಲ, ಎಲ್ಲವನ್ನೂ ಮೀರಿ ನಿಲ್ಲುತ್ತವೆ ಎಂಬುದನ್ನು ‘ದ ಬ್ಲೈಂಡ್ ಸೈಡ್’ ಸಫಲವಾಗಿ ತೋರುತ್ತದೆ. ಅದರ ಜತೆಗೇ ಇಂತಹ ಸಂಬಂಧಗಳನ್ನು ಪ್ರಪಂಚ ಯಾವ ರೀತಿ ಹಳದಿಕಣ್ಣಿಂದ ನೋಡುತ್ತದೆ ಎಂಬುದೂ ಇಲ್ಲಿ ವ್ಯಕ್ತವಾಗಿದೆ. ತನ್ನ ಮಗನನ್ನು ಆತನ ಪ್ರತಿಯೊಂದು ಹೆಜ್ಜೆಯಲ್ಲಿಯೂ ಬಿಡದೆ ಬೆಂಬಲಿಸುವ ಗಟ್ಟಿಮನಸ್ಸಿನ ತಾಯಿ ಲೀ ಆನಳ ಪಾತ್ರ ನಿರ್ವಹಿಸಿರುವ ನಟಿ ಸ್ಯಾಂಡ್ರಾ ಬುಲಾಕ್‌ಗೆ ಈ ಸಾರೆಯ ಆಸ್ಕರ್ ದೊರೆತಿದ್ದು ತಾಯಂದಿರಿಗೆ ದೊರೆತ ದೊಡ್ಡ ಗೌರವ ಎನ್ನಬಹುದು.
ತನ್ನ ಮಗನನ್ನು ಒಳ್ಳೆಯ ಕಾಲೇಜಿಗೆ ಸೇರಿಸುವ ಲೀ ಆನ್ ಆತನನ್ನು ಹಾಸ್ಟೆಲಿನಲ್ಲಿ ಒಂಟಿಯಾಗಿ ಬಿಟ್ಟುಹೋಗುವಾಗ ಕಾರಿನ ಬಳಿ ಒಂಟಿಯಾಗಿ ದುಖಿಸುವ ದೃಶ್ಯ ಮತ್ತು ಆಕೆಯನ್ನು ಮೈಕೆಲ್ ತನ್ನದೇ ರೀತಿಯಲ್ಲಿ ಸಂತೈಸುವ ದೃಶ್ಯಗಳು ಮನಸ್ಸಿಗೆ ತಾಗುತ್ತವೆ. ಎಲ್ಲಿಯೂ ಅತಿಯಾದ ಭಾವಾವೇಶವಿಲ್ಲದೆ ಸಮತೋಲನವನ್ನು ಕಾಪಾಡಿಕೊಂಡು ಸಾಗುವ ಚಲನಚಿತ್ರ ಮಾನವೀಯ ಸಂಬಂಧಗಳ ವೈಶಾಲ್ಯ ಮತ್ತು ಸಂಕೀರ್ಣತೆಯನ್ನು ಅವುಗಳ ಎಲ್ಲ ಬಣ್ಣಗಳೊಂದಿಗೆ ನಮ್ಮೆದುರು ಇಡುತ್ತದೆ. ಮೈಕೆಲ್ ಓಹೆರ್‌ನ ಪಾತ್ರ ವಹಿಸಿರುವ ಕ್ವಿಂಟನ್ ಏರನ್ ತನ್ನ ಮೌನದಿಂದಲೆ ಬಹಳಷ್ಟನ್ನು ಹೇಳುತ್ತಾರೆ. ಚಲನಚಿತ್ರ ಎಲ್ಲಿಯೂ ಬೇಸರ ಹುಟ್ಟಿಸದು.
ಲೀ ಆನಳಂತಹ ವೀರ ತಾಯಂದಿರಿಗೆ ವಂದನೆಗಳು.  ಆಕೆಯಂತಹವರಿಂದ ಬಹುಶಃ ನೂತನ ಸಂಸ್ಕೃತಿಗಳು ಹುಟ್ಟಿಕೊಳ್ಳುತ್ತವೆ ಮತ್ತು ಇದು ಆಕೆಯಂತಹ ಹಟಮಾರಿಗಳಿಂದ ಮಾತ್ರ ಸಾಧ್ಯ.
ಚಿತ್ರಕೃಪೆ: www.fanpop.com

Older Entries